ಪಾಟ್ನಾ : ಜೆಡಿಯು ನಾಯಕ ನಿತೀಶ್ ಕುಮಾರ್ ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಜೆ 5 ಗಂಟೆಗೆ ಪಾಟ್ನಾದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಬಿಹಾರ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಕಳೆದ ಲೋಕಸಭೆ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ನಿತೀಶ್ ಕುಮಾರ್, ತಮ್ಮ ಆಪ್ತ ಜೀತನ್ ರಾಮ್ ಮಾಂಝಿ ಅವರನ್ನು ಬಿಹಾರ ಮುಖ್ಯಮಂತ್ರಿಯಾಗಿ ನೇಮಕ ಮಾಡಿದ್ದರು. ಆದರೆ ಪಕ್ಷದ ವಿರುದ್ಧವೇ ಬಂಡೆದಿದ್ದ ಮಾಂಝಿ ಶುಕ್ರವಾರ ವಿಶ್ವಾಸಮತ ಸಾಬೀತಿಗೂ ಮೊದಲೇ ರಾಜೀನಾಮೆ ನೀಡಿದ್ದರು.