ನವದೆಹಲಿ : ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚಿಂತನೆ ನಡೆಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಏಪ್ರಿಲ್ ನಲ್ಲಿ ಎಐಸಿಸಿ ಅಧಿವೇಶನ ನಡೆಯಲಿದ್ದು, ಪಕ್ಷವನ್ನು ಸಂಘಟಿಸುವ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಇದಕ್ಕಾಗಿ ರೂಪುರೇಷೆಗಳನ್ನು ಸಿದ್ಧಪಡಿಸಲು ರಾಹುಲ್ ಗಾಂಧಿ ಸಂಸತ್ ಅಧಿವೇಶನಕ್ಕೂ ಹಾಜರಾಗದೇ ಶ್ರಮಪಡುತ್ತಿದ್ದಾರೆ.
ಒಂದು ವಾರದ ನಂತರ ಸಂಸತ್ ಅಧಿವೇಶನಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಫೆ.23ರಿಂದ ನವದೆಹಲಿಯಲ್ಲಿ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ ಮಾಡಿದ್ದು ರಾಹುಲ್ ಗಾಂಧಿ ಅಧಿವೇಶನದ ಪ್ರಥಮ ದಿನ ಗೈರು ಹಾಜರಾಗಿದ್ದರು.