ಬೆಂಗಳೂರು : 'ದಲಿತ'ರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಯಾರೂ ಮಾತನಾಡಬಾರದು ಎಂದು ನಿರ್ಬಂಧ ವಿಧಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ದಲಿತ ಸಂಘಟನೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆರೋಪಿಸಿದ್ದಾರೆ.
ಫೆ.23ರಂದು ಖಾಸಗಿ ಹೊಟೇಲ್ ನಲ್ಲಿ ನಡೆದ ದಲಿತ ಮುಖಂಡರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ವೆಂಕಟಸ್ವಾಮಿ, ದಲಿತ ಸಿ.ಎಂ ವಿಚಾರವಾಗಿ ಮಾತನಾಡದಂತೆ ಸೂಚನೆ ನೀಡಿರುವ ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರನ್ನು ಮುಖ್ಯಮಂತ್ರಿ ಮಾಡುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಘಟನೆ, ದೆಹಲಿಗೆ ನಿಯೋಗ ಕೊಂಡೊಯ್ಯುವುದು ಹಾಗೂ ರಾಜ್ಯದಲ್ಲಿ ಜನಾಂದೋಲನ ಹಮ್ಮಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈ ಕಮಾಂಡ್ ಸ್ಪಷ್ಟ ನಕಾರದ ನಂತರವೂ ದಲಿತ ಸಂಘಟನೆಗಳು ದಲಿತ ಮುಖ್ಯಮಂತ್ರಿಗಾಗಿ ಪಟ್ಟು ಹಿಡಿದು ಹೊರಾಟವನ್ನು ಮುಂದುವರೆಸಲು ನಿರ್ಧರಿಸಿವೆ. ಇತ್ತೀಚೆಗಷ್ಟೇ ಪಂಚತಾರ ಹೋಟೆಲ್ ನಲ್ಲಿ ಸಭೆ ನಡೆಸಿದ್ದ ದಲಿತ ಸಂಘಟನೆಗಳು ಫೆ.24ರವರೆಗೂ ಗಡುವು ನೀಡಿ ಆ ವೇಳೆಗೆ ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡದಿದ್ದರೆ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿದ್ದವು.