ಬೆಂಗಳೂರು : ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ರಾಜ್ಯ ಸರ್ಕಾರದ ಪ್ರತಿನಿಧಿಗಳ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ 46,600 ಮತಕೇಂದ್ರಗಳಿದ್ದು, ಪ್ರತಿಯೊಂದರಲ್ಲೂ ಕನಿಷ್ಠ 50 ಮಂದಿ ಕ್ರಿಯಾಶೀಲ ಸದಸ್ಯರನ್ನು ನೋಂದಾಯಿಸಬೇಕೆಂಬ ಗುರಿಯೊಂದಿಗೆ ಅಭಿಯಾನ ಆರಂಭಿಸಲಾಯಿತು. ಕಳೆದ ಆರು ತಿಂಗಳಿನಿಂದಲೂ ಈವರೆಗೂ ಅಭಿಯಾನ ಕುಂಟುತ್ತಾ ಸಾಗುತ್ತಿದೆ. ಹಲವು ಕಡೆ ಉತ್ತಮ ಸಾಧನೆಯಾಗಿದೆ, ಇನ್ನೂ ಕೆಲವು ಕಡೆ ನಿರಾಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸರ್ಕಾರದ ಸಚಿವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನೀಡುತ್ತಿರುವ ಸೂಚನೆಗಳಿಗೆ ಶಾಸಕರು, ಸಚಿವರು ಬೆಲೆ ನೀಡುತ್ತಿಲ್ಲ. ಹೀಗಾಗಿ ಸದಸ್ಯತ್ವ ನೋಂದಣಿ ಅಭಿಯಾನ ಕುಂಟುತ್ತಾ ಸಾಗಿದೆ. ಬಿಜೆಪಿ ರಾಜ್ಯದಲ್ಲಿ 1 ಕೋಟಿ ಸದಸ್ಯರನ್ನು ನೋಂದಣಿ ಮಾಡಿಕೊಳ್ಳುವ ಉದ್ದೇಶದಿಂದ ಸಮರೋಪಾದಿಯಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಪ್ರತಿಕ್ರಿಯೆ ಸಹಕಾರ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಿಷ್ಠ 20-30 ಲಕ್ಷ ಸದಸ್ಯರನ್ನು ನೋಂದಾಯಿಸಿಕೊಳ್ಳಬೇಕಿತ್ತು.
ಪಕ್ಷದಿಂದ ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಸರ್ಕಾರದ ಪ್ರತಿನಿಧಿಗಳು ಸಹಕರಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಠಿಣ ಎಚ್ಚರಿಕೆ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.