ನವದೆಹಲಿ : 'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ಶೀಘ್ರವೇ ಉತ್ತಮ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಫೆ.23ರಂದು ನವದೆಹಲಿಯಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಸರ್ಕಾರ ರಚನೆ ಬಗ್ಗೆ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.
ಆರ್ಟಿಕಲ್ 370, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ, ಏಕರೂಪ ನಾಗರಿಕ ಸಂಹಿತೆ ವಿಚಾರಗಳಲ್ಲಿ ಉಭಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಇದ್ದರೂ ಈ ವಿಷಯಗಳ ಬಗ್ಗೆ ಯಥಾಸ್ಥಿತಿ ಕಾಯ್ದುಕೊಂಡು ಜಮ್ಮು-ಕಾಶ್ಮೀರದ ಅಭಿವೃದ್ಧಿ ದೃಷ್ಟಿಯಿಂದ ಪಿಡಿಪಿ-ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿವೆ.
ಪಿಡಿಪಿ ಅಧ್ಯಕ್ಷ ಮುಫ್ತಿ ಮಹಮ್ಮದ್ ಸಯೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡನೆಯಾಗಲಿದೆ. ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವೂ ಸಿದ್ಧವಾಗಿದ್ದು ಮೋದಿ ಭೇಟಿ ನಂತರ ಪ್ರಕಟ ಮಾಡಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಮೆಹಬೂಬಾ ಮುಫ್ತಿ, ಅಧಿಕಾರಕ್ಕಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ, ಜನರ ಹೃದಯ ಗೆಲ್ಲಲು ಹಾಗೂ ಜಮ್ಮು-ಕಾಶ್ಮೀರದ ಜನತೆಯ ಹಿತದೃಷ್ಟಿಯಿಂದ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಮಾರ್ಚ್ 1ರಂದು ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ಪಿಡಿಪಿ ನಾಯಕ ಮುಫ್ತಿ ಮೊಹಮದ್ ಸಯೀದ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಬಿಜೆಪಿ ಶಾಸಕ ನಿರ್ಮಲ್ ಸಿಂಗ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 87 ಸದಸ್ಯರ ವಿಧಾನ ಸಭೆಯಲ್ಲಿ ಪಿಡಿಪಿ 28 ಮತ್ತು ಬಿಜೆಪಿ 25 ಶಾಸಕರನ್ನು ಹೊಂದಿದೆ.
ಕಳೆದ ಡಿಸೆಂಬರ್ ಅಂತ್ಯಕ್ಕೆ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗಿನಿಂದಲೂ ಸರ್ಕಾರ ರಚನೆಯ ಕಸರತ್ತು ನಡೆದಿತ್ತು.