ನವದೆಹಲಿ : ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಿರುವ ಎನ್.ಡಿ.ಎ ಸರ್ಕಾರದ ಪೂರ್ಣಾವಧಿ ರೈಲ್ವೆ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ಕನಸಿನ ಬಜೆಟ್ ಎಂದು ಟೀಕಿಸಿದ್ದಾರೆ.
ಬಜೆಟ್ ನಲ್ಲಿ ಘೋಷಿಸಲಾಗಿರುವ ಯಾವುದೇ ಅಂಶಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಕ್ಕೆ ಸಾಧ್ಯವಿಲ್ಲ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಖಾಸಗಿ ಸಹಭಾಗಿತ್ವದ ಮೂಲಕ ಹಲವು ಯೋಜನೆ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ಆದರೆ, ಯಾವ ಮಾರ್ಗದಲ್ಲಿ, ಎಷ್ಟು ಕಿ.ಮೀ. ಮುಂತಾದ ಮಾಹಿತಿಗಳಿಲ್ಲ. ಆದ್ದರಿಂದ ಇದು ಕೇವಲ ಘೋಷಣೆಯ ಬಜೆಟ್ ಆಗಿದೆ ಎಂದು ಖರ್ಗೆ ಟೀಕಿಸಿದ್ದಾರೆ.
ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಮಾಯಾವತಿ, ಕಳೆದ 9 ತಿಂಗಳಿನಲ್ಲಿ ರೈಲ್ವೆ ಇಲಾಖೆಯಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಆದರೆ, ಸರ್ಕಾರ ಹಿಂದಿನ ಬಜೆಟ್ ನ ಎಷ್ಟು ಯೋಜನೆಗಳನ್ನು ಅನುಷ್ಟಾನ ಮಾಡಿದೆ ಎಂದು ಮಾಹಿತಿ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ಬದ್ಧ ವೈರಿಯಾದ ನಿತೀಶ್ ಕುಮಾರ್ ಸಹ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ಬಜೆಟ್ ನಲ್ಲಿ ಪ್ರಯಾಣದರವನ್ನು ಕಡಿಮೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಸರ್ಕಾರ ಜನರಿಗೆ ನಿರಾಸೆ ಮಾಡಿದೆ ಎಂದು ಹೇಳಿದ್ದಾರೆ.