BW News Bureau : ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈ ವಾಕ್ ಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದ್ದಾರೆ.
ನೀರಿನ ಟ್ಯಾಂಕರ್ ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಾರ್ಜ್, ನಗರದಲ್ಲಿ ಸ್ಕೈ ವಾಕ್ ಗಳು ಎಲ್ಲೆಲ್ಲಿ ಅಗತ್ಯವಿದೆ ಎಂಬುದನ್ನು ಗುರುತಿಸಿ ಸ್ಕೈ ವಾಕ್ ಗಳನ್ನು ಅಳವಡಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಜತೆಗೆ ಪೆಲಿಕಾನ್ ದೀಪಗಳನ್ನೊಳಗೊಂಡ ಸಿಗ್ನಲ್ ಗಳನ್ನು ಪಾದಚಾರಿಗಳ ಅನುಕೂಲಕ್ಕಾಗಿ ನಿರ್ಮಿಸಲಾಗುವುದು ಎಂದು ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಹೆಬ್ಬಾಳ ಬಳಿ ನಿನ್ನೆ (ಗುರುವಾರ) ನಡೆದ ರಸ್ತೆ ಅಪಘಾತದಲ್ಲಿ ಟ್ಯಾಂಕರ್ ಚಾಲಕನ ತಪ್ಪಿರುವುದು ಕಂಡುಬಂದಿದೆ. ಈ ಬಗ್ಗೆ ಇನ್ಸ್ಪೆಕ್ಟರ್ ತನಿಖೆ ನಡೆಸಿ ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಫೆ.26ರಂದು ಹೆಬ್ಬಾಳದ ಕೆಂಪಾಪುರದ ಬಳಿ ನೀರಿನ ಟ್ಯಾಂಕರ್ವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಹೊಡೆದು ಬಳಿಕ ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಐವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಯಲ್ಲಿ ಸಿಂಧಿ ಕಾಲೇಜಿನ ವಿದ್ಯಾರ್ಥಿನಿ ಅರ್ಪಿತಾ ಕೂಡಾ ಸಾವನ್ನಪ್ಪಿದ್ದರು. ಘಟನೆ ಖಂಡಿಸಿ ಫೆ.28ರಂದು ಏರ್ ಪೋರ್ಟ್ ರಸ್ತೆ ತಡೆ ನಡೆಸುವ ಮೂಲಕ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದ್ದರು.