K R Puram : ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಫೆ.27ರಂದು ಕೆ.ಆರ್ ಪುರಂ ನಲ್ಲಿ ಆಹಾರ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಮಾರ್ಚ್ ಅಂತ್ಯದೊಳಗೆ ಬಾಕಿ ಉಳಿದಿರುವ ಪಡಿತರ ಚೀಟಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈವರೆಗೂ ಸಲ್ಲಿಕೆಯಾಗಿರುವ 39 ಲಕ್ಷ ಪಡಿತರ ಚೀಟಿ ಅರ್ಜಿಯಲ್ಲಿ 18.5 ಲಕ್ಷ ಪಡಿತರ ಚೀಟಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇದರಲ್ಲಿ 16 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, ಇನ್ನೂ 5.6 ಲಕ್ಷ ಬಿಪಿಎಲ್ ಪಡಿತರ ಚೀಟಿಗಳು ಬಾಕಿ ಉಳಿದಿವೆ. ಇವುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದೆಂದು ತಿಳಿಸಿದರು.
ಪಡಿತರ ವಿತರಣೆಯಲ್ಲಿನ ತೂಕ ಹಾಗೂ ಸ್ಥಳದಲ್ಲಿ ಮೋಸ ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ದೂರುಗಳನ್ನು ಸಲ್ಲಿಸಬೇಕು. ತಪ್ಪುಗಳು ಸಾಬೀತಾದಲ್ಲಿ ಪಡಿತರ ಚೀಟಿಯ ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆ.ಆರ್.ಪುರಂನಲ್ಲಿ ವಾಹನ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು ಸ್ಥಳೀಯ ಶಾಸಕರು ಬೆನ್ನಿಗಾನಹಳ್ಳಿಯಿಂದ ಕೆ.ಆರ್.ಪುರಂನ ಬಸ್ ನಿಲ್ದಾಣದವರೆಗೆ ಮೇಲ್ಸೇತುವೆ ಕಾಮಗಾರಿಗೆ ಮನವಿ ಮಾಡಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಬಗ್ಗೆ ಅನುಮತಿ ಪಡೆಯುವುದಾಗಿ ತಿಳಿಸಿದರು.