ನವದೆಹಲಿ : ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಪ್ರಸಾರ ತಡೆಯಲು ನ್ಯಾಯಾಲಯದಿಂದ ನಿನ್ನೆ ರಾತ್ರಿ ಅನುಮತಿ ದೊರೆತಿದ್ದು, ಯಾವುದೇ ಕಾರಣಕ್ಕೂ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಿಸಲಾಗಿದ್ದು, ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದರು. ಅಲ್ಲದೆ ಸಂದರ್ಶನಕ್ಕೆ ಅನುಮತಿ ನೀಡಿರುವುದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸಿಂಗ್, 2013, ಜು.24ರಂದು ಯುಪಿಎ ಆಡಳಿತ ಅವಧಿಯಲ್ಲಿ ಅಪರಾಧಿಯ ಸಂದರ್ಶನಕ್ಕೆ ಅವಕಾಶ ನೀಡಲಾಗಿತ್ತು ಎಂದು ಹೇಳಿದರು.
ಅಪರಾಧಿಯ ಸಂದರ್ಶನವುಳ್ಳ ಸಾಕ್ಷ್ಯಚಿತ್ರ ವಿದೇಶಗಳಲ್ಲಿಯೂ ಪ್ರಸಾರವಾಗಂತೆ ನಿಷೇಧ ಹೇರಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ದೇಶಗಳಿಗೂ ಸಂದರ್ಶನ ಪ್ರಸಾರ ಮಾಡದಂತೆ ಗೃಹ ಸಚಿವರು ಮನವಿ ಮಾಡಿದ್ದಾರೆ.
ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಅಪರಾಧಿ ಮುಕೇಶ್ ಸಿಂಗ್ ನ ಸಂದರ್ಶನ ನಡೆಸಿದ್ದ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ವಿರುದ್ಧ ದೆಹಲಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಆದರೆ ಸಂದರ್ಶನ ನಡೆಸಲು ಕೇಂದ್ರ ಸಚಿವಾಲಯದ ಹಾಗೂ ತಿಹಾರ್ ಜೈಲಿನ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದಿದ್ದೇನೆ. ಎಲ್ಲ ನಿಯಮ ಪಾಲಿಸಿದ್ದೇನೆ ಎಂದು ಲೆಸ್ಲಿ ಸ್ಪಷ್ಟನೆ ನೀಡಿದ್ದರು.
ಈ ಮಧ್ಯೆ ಸಂದರ್ಶನ ಸಾಕ್ಷಚಿತ್ರ ನಿಷೇಧ ಎತ್ತಿಹಿಡಿದಿರುವ ದೆಹಲಿ ಹೈಕೋರ್ಟ್, ಸಂದರ್ಶನವನ್ನು ಯಾವುದೇ ವಾಹಿನಿಗಳಲ್ಲಿ ಪ್ರಸಾರ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಅಲ್ಲದೇ ಇಂಟರ್ ನೆಟ್ ನಲ್ಲೂ ಪ್ರಸಾವಾಗಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.