ನವದೆಹಲಿ : ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಬಗ್ಗೆ ಮಾತನಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ರೇಡಿಯೋ ನಲ್ಲಿ ಪ್ರಸಾರವಾಗುವ ಜನಪ್ರಿಯ ಮನ್ ಕಿ ಬಾತ್ ಕಾರ್ಯಕ್ರಮದ ಮುಂದಿನ ಸಂಚಿಕೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾ.22ರಂದು ಪ್ರಸಾರವಾಗಲಿರುವ ಕಾರ್ಯಕ್ರಮದಲ್ಲಿ, ರೈತರ ಬಗ್ಗೆ ಮಾತನಾಡುವುದಾಗಿ ಮೋದಿ ತಿಳಿಸಿದ್ದಾರೆ.
ರೈತರು ತಮ್ಮ ಸಮಸ್ಯೆಗಳ ಬಗ್ಗೆ ತಿಳಿಸಬೇಕೆಂದು ಮನವಿ ಮಾಡಿರುವ ಪ್ರಧಾನಿ ಮೋದಿ, ತಮಗೆ ಪತ್ರ ಬರೆಯುವಂತೆ ಸಲಹೆ ನೀಡಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿ ಪ್ರಥಮಬಾರಿಗೆ ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರಗೊಂಡಿತ್ತು. ನಂತರ ಸ್ವಚ್ಛ ಭಾರತ್ ಅಭಿಯಾನ, ದೇಶವನ್ನು ಕಾಡುತ್ತಿರುವ ಮಾದಕ ವ್ಯಸನ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಮೋದಿ, ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದರು.
ಇತ್ತೀಚೆಗಷ್ಟೇ ಭಾರತಕ್ಕೆ ಭೇಟಿ ನೀಡಿದ್ದ ಬರಾಕ್ ಒಬಾಮ ಅವರೊಂದಿಗೂ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ನಡೆಸಿದ್ದರು.