ಬೆಂಗಳೂರು : ನಿಗೂಢವಾಗಿ ಸಾವನ್ನಪ್ಪಿದ್ದ ಡಿ.ಕೆ ರವಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಯುವ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿ.ಎಂ ಸಿದ್ದರಾಮಯ್ಯ ಮರಣೋತ್ತರ ಪರೀಕ್ಷಾ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರವಿ ಅವರು ಮೃತಪಟ್ಟ ಸೆಂಟ್ ಜಾನ್ ಅಪಾರ್ಟ್ ಮೆಂಟ್ಗಾಗಲಿ, ಸಾರ್ವಜನಿಕ ದರ್ಶನಕ್ಕೆ ಪಾರ್ಥೀವ ಶರೀರ ಇಟ್ಟಿದ್ದ ನಿವಾಸಕ್ಕಾಗಲಿ ಭೇಟಿ ನೀಡದ ಮುಖ್ಯಮಂತ್ರಿ ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ವರದಿಯನ್ನು ತಿರಚಲು ಹೋಗಿದ್ದರೇ ಎಂದು ಪ್ರಶ್ನಿಸಿದ್ದಾರೆ.
ಡಿ.ಕೆ ರವಿ ಅವರ ಸಾವಿನ ವಿಷಯದಲ್ಲಿ ಸರ್ಕಾರ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ಸಿಬಿಐ ತನಿಖೆ ನಡೆಸಬೇಕು ಎಂಬುದು ರಾಜ್ಯದ ಜನತೆಯ ದನಿಯಾಗಿ. ಇದಕ್ಕೆ ಸರ್ಕಾರ ಮನ್ನಣೆ ನೀಡಬೇಕು ಎಂದರು.
ಪೋಸ್ಟ್ ಮಾರ್ಟಂ ವರದಿ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತದೇಹ ವೀಕ್ಷಿಸಲು ಅವರ ಮನೆಗೆ ಹೋಗುವ ಬದಲು ಆಸ್ಪತ್ರೆಗೆ ಹೋಗಿದ್ದೇಕೆ ಎಂಬ ಕುಮಾರಸ್ವಾಮಿ ಅವರ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಇನ್ನು ಮೇಲೆ ಎಲ್ಲದಕ್ಕೂ ಅವರನ್ನೇ ಕೇಳಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದರು.