ಬೆಂಗಳೂರು : 'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ ದನಿಗೂಡಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿದ್ದರಾಮಯ್ಯ ಸಿಬಿಐಗೆ ವಹಿಸಲಿ, ನಿಷ್ಪಕ್ಷಪಾತ ತನಿಖೆ ಮೂಲಕ ಸತ್ಯ ಹೊರಬರಲಿ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಸಿಬಿಐ ತನಿಖೆಗೆ ಒತ್ತಾಯವಾಗಿದೆ. ಆದ್ದರಿಂದ ರಾಜ್ಯದ ಜನರ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಬೇಕಿದೆ ಎಂದು ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ. ದೇವನೂರು ಮಹಾದೇವ ಬಹುತೇಕ ಸಂದರ್ಭಗಳಲ್ಲಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದರು. ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆಯಲ್ಲಿ ಸಿದ್ದರಾಮಯ್ಯ ತಮ್ಮ ನಿರ್ಧಾರವನ್ನು ಬದಲಿಸಿಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿಗಳನ್ನು ಬೆಂಬಲಿಸುತ್ತಿದ್ದ ಸಾಹಿತಿಯೇ ಒತ್ತಾಯಿಸಿದ್ದಾರೆ.
ಇನ್ನು ತುಮಕೂರು ಸಂಸದ ಮುದ್ದಹನುಮೇಗೌಡ ಸಹ ರಾಜ್ಯ ಸರ್ಕಾರ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಸಿಬಿಐ ತನಿಖೆಗೆ ನೀಡಬೇಕೆಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಒಂದು ವೇಳೆ ಸರ್ಕಾರ ಸಿಬಿಐ ತನಿಖೆಗೆ ನೀಡದೇ ಇದ್ದಲ್ಲಿ ಸರ್ಕಾರದ ಬಗ್ಗೆ ಅನುಮಾನ ಮೂಡುತ್ತದೆ ಎಂದು ಹೇಳಿದ್ದಾರೆ.
ಸ್ವಪಕ್ಷೀಯ ಸಚಿವರು, ಸಂಸದರು, ತಮ್ಮನ್ನು ಪ್ರತಿ ಹಂತದಲ್ಲೂ ಬೆಂಬಲಿಸಿದ್ದ ಸಾಹಿತಿಗಳೇ ಸಿಬಿಐ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತಿದ್ದರೂ ಸರ್ಕಾರ ಮಾತ್ರ ಭಂಡತನ ಪ್ರದರ್ಶಿಸುತ್ತಿರುವುದು ಸರ್ಕಾರದ ಮೆಲೆ ಇರುವ ಅನುಮಾನವನ್ನು ಮತ್ತಷ್ಟು ಬಲಗೊಳಿಸಿದೆ.