ಬೆಂಗಳೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಮಾರ್ಚ್ 28ರಂದು ಕನ್ನಡ ಪರ ಸಂಘಟನೆಗಳು ಒಟ್ಟಾಗಿ ಬಂದ್ ನಡೆಸಲು ನಿರ್ಧರಿಸಿವೆ ಎಂದು ಹೇಳಿದರು. ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವು ಪ್ರಕರಣವನ್ನು ರಾಜ್ಯಸರ್ಕಾರ ಸಿಬಿಐ ಒಪ್ಪಿಸಲು ಹಿಂದೇಟು ಹಾಕುತ್ತಿರುವುದರಿಂದ ಈ ಬಂದ್ ಮೂಲಕ ನಮ್ಮ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು. ಶಇದೇ ವೇಳೆ ನಿವಾರ ಬೆಳಗ್ಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ತನಕ ಮೌನ ಮೆರವಣಿಗೆ ನಡೆಸಲಾಗುವುದು ಎಂದು ವಾಟಾಳ್ ಮಾಹಿತಿ ನೀಡಿದರು.
ಮಾ.28ರ ಬೆಳಗ್ಗೆಯಿಂದ ಸಂಜೆ ತನಕ ಸಂಪೂರ್ಣ ಬಂದ್ ಆಚರಿಸಬೇಕು. ಬಂದ್ ವೇಳೆ ಎಲ್ಲಿಯೂ ಗಲಾಟೆ ನಡೆಸಬಾರದು ಎಂದು ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡರು. ಸುದ್ದಿಗೋಷ್ಠಿ ವೇಳೆ ಸಾರಾಗೋವಿಂದು ಅವರು ಕೂಡ ಉಪಸ್ಥಿತರಿದ್ದರು