ನವದೆಹಲಿ : ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್, ಏಪ್ರಿಲ್ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್ ಕಿಸಾನ್ ಜಾಥಾ ಆಯೋಜಿಸಲು ನಿರ್ಧರಿಸಿದೆ.
ಸೋನಿಯಾ ಗಾಂಧಿ ಈ ಜಾಥಾದಲ್ಲಿ ಭಾಷಣ ಮಾಡಲಿದ್ದಾರೆ. ಕಾಂಗ್ರೆಸ್ ಆಳ್ವಿಕೆ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ರಜೆ ಮೇಲಿರುವ ರಾಹುಲ್ ಗಾಂಧಿ ಭಾಗವಹಿಸುತ್ತಾರೆಯೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ರಜೆ ಮುಗಿಸಿ ರಾಹುಲ್ ಈ ವಾರ ಹಿಂತಿರುಗಲಿದ್ದಾರೆಂಬ ವರದಿಗಳು ಇವೆಯಾದರೂ, ಅದು ದೃಢಪಟ್ಟಿಲ್ಲ.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಭೆ ಸೇರಿ ಸಮಾಲೋಚನೆ ನಡೆಸಿದ ಹಿರಿಯ ನಾಯಕರು, ಏಪ್ರಿಲ್ ಎರಡನೇ ವಾರದಲ್ಲಿ ಜಾಥಾ ನಡೆಸುವ ಕುರಿತು ನಿರ್ಧಾರ ಕೈಗೊಂಡಿದ್ದಾರೆ. ದುಃಖದಲ್ಲಿ ಮುಳುಗಿರುವ ರೈತರಿಗೆ ಧ್ವನಿ ನೀಡಲು ಈ ಸಮಾವೇಶವನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. ಕಿಸಾನ್ ಜಾಥಾ ಕುರಿತ ಯೋಜನೆಗಳನ್ನು ಅಂತಿಮಗೊಳಿಸಲು ಹಿರಿಯ ನಾಯಕ ಎ.ಕೆ. ಆ್ಯಂಟನಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ.
ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ರೈತ ಸಂಘಟನೆಗಳ ಜತೆಗೂಡಿ ಕಾಂಗ್ರೆಸ್ ಪಕ್ಷ ಜಾಥಾ ನಡೆಸಲಿದೆ ಎಂಬ ನಿರೀಕ್ಷೆ ಇತ್ತಾದರೂ, ಇದು ಕಾಂಗ್ರೆಸ್ ಪಕ್ಷದ ರ್ಯಾಲಿಯಾಗಿರಲಿದೆ ಎಂದು ದ್ವಿವೇದಿ ಸ್ಪಷ್ಟಪಡಿಸಿದರು. ನೈಸರ್ಗಿಕ ವಿಕೋಪದಿಂದ ಬೆಳೆ ನಷ್ಟ ಅನುಭವಿಸಿದ ರೈತರನ್ನು ಸಂತೈಸಲು ರಾಜಸ್ಥಾನ ಹಾಗೂ ಹರ್ಯಾಣ ಪ್ರವಾಸವನ್ನು ಸೋನಿಯಾ ಗಾಂಧಿ ಅವರು ಇತ್ತೀಚೆಗಷ್ಟೇ ಕೈಗೊಂಡಿದ್ದರು. ಇದರ ಬೆನ್ನಲ್ಲೇ ಜಾಥಾ ಆಯೋಜನೆಗೆ ಸಿದ್ಧತೆಗಳು ಆರಂಭವಾಗಿವೆ.