Untitled Document
Sign Up | Login    
Dynamic website and Portals
  
March 23, 2015

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಕೊನೆಗೂ ಸಿಬಿಐ ತನಿಖೆಗೆ ಒಪ್ಪಿಸಿದ ಸರ್ಕಾರ

ಬೆಂಗಳೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಜನತೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ನಿರೀಕ್ಷೆಯಂತೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ಸೋಮವಾರ ವಿಧಾನಮಂಡಲದ ಕಲಾಪ ಆರಂಭವಾಗುತ್ತಿದ್ದಂತೆಯೇ ರವಿ ಸಾವಿನ ಪ್ರಕರಣದ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾ.16ರಂದು ಡಿ.ಕೆ.ರವಿ ಸಾವು ಸಂಭವಿಸಿತ್ತು. ಆ ದಿನವೇ ಅವರ ಮಾವ ಹನುಮಂತರಾಯಪ್ಪ ದೂರನ್ನು ದಾಖಲಿಸಿದ್ದರು. ಬಳಿಕ ಪೊಲೀಸರು ತನಿಖೆಯನ್ನು ಆರಂಭಿಸಿದ್ದರು. 17ನೇ ತಾರೀಕಿನಂದು ಪ್ರಕರಣದ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೇನೆ.

ಈ ಬಗ್ಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಕೂಡಾ ಹೇಳಿಕೆ ನೀಡಿದ್ದರು. ಆದರೆ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ಮಾಡಿಸುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದರು. ನಮ್ಮ ಪೊಲೀಸರು ಸಮರ್ಥರಿದ್ದಾರೆ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಬಾರದು ಎಂಬ ನಿಟ್ಟಿನಲ್ಲಿ ಹಿರಿಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ರವಿ ಪ್ರಕರಣವನ್ನು ಸಿಐಡಿ ಮೂಲಕ ನಡೆಸಲಾಗುವುದು ಎಂದು ಸದನದಲ್ಲಿ ಉತ್ತರ ಕೊಟ್ಟಿದ್ದೆ. ವಿರೋಧಪಕ್ಷದವರಿಗೆ ಸಮಾಧಾನವಾಗದಿದ್ದರೆ ಮುಂದೆ ನೋಡುವ ಎಂದು ಕೂಡಾ ಹೇಳಿದ್ದೆ.

ಅಲ್ಲದೇ ತನಿಖೆಯ ಸ್ಟೇಟಸ್ ರಿಪೋರ್ಟ್ ಅನ್ನು ಸದನದಲ್ಲಿ ಇಡುವುದಾಗಿ ಹೇಳಿದ್ದೆ. ಆದರೆ ಇದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಆ ಬಗ್ಗೆ ಏನನ್ನೂ ಪ್ರಸ್ತಾಪಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ನಾನು ರವಿಯವರ ಪೋಷಕರಿಗೆ ಮಾತು ಕೊಟ್ಟಿದ್ದೆ. ಸತ್ಯ ಹೊರಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂಬುದು ಕೂಡಾ ನಮ್ಮ ನಿಲುವಾಗಿತ್ತು. ಈ ಪ್ರಕರಣವನ್ನು ಮುಚ್ಚಿಹಾಕಬೇಕೆಂಬ ಉದ್ದೇಶವಾಗಲಿ, ಯಾರನ್ನೂ ರಕ್ಷಿಸುವ ಉದ್ದೇಶ ನಮಗಿಲ್ಲ. ಆದರೆ ಪ್ರತಿಪಕ್ಷಗಳು ಸಾವಿನ ವಿಚಾರದಲ್ಲೂ ರಾಜಕಾರಣ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದಾಗ, ನಿಮ್ಮ(ಬಿಜೆಪಿ) ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದೀರಾ? ಸಿಬಿಐ ಅಂದ್ರೆ ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್, ಚೋರ್ ಬಚಾವೋ ಎಂದೆಲ್ಲಾ ಹೇಳುತ್ತಿದ್ದೀರಲ್ಲಾ ಈಗ ನಿಮಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು. ಸತ್ತ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಸಾರ್ವಜನಿಕರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ. ಜನರ ಭಾವನೆಗಳನ್ನು ಗೌರವಿಸುವುದು ಗೊತ್ತು ಎಂದು ಹೇಳಿದರು.

ರವಿ ತಂದೆ ತಾಯಿಗೆ ಕೊಟ್ಟ ಮಾತಿನಂತೆ, ಸಾರ್ವನಿಕರ ಭಾವನೆಗೆ ಗೌರವ ಕೊಟ್ಟು ಈ ಪ್ರಕರಣವನ್ನು ಸಿಬಿಐಗೆ ವಹಿಸಲು ತೀರ್ಮಾನ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಘೋಷಿಸಿದರು. ಈ ಹಂತದಲ್ಲಿ ಬಿಜೆಪಿ, ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದವು. ಪ್ರತಿಪಕ್ಷಗಳು ಸಾವಿನ ವಿಚಾರದಲ್ಲಿ ರಾಜಕೀಯ ಮಾಡಿಲ್ಲ ಎಂದು ಹೇಳಿದವು. ಕಲಾಪದಲ್ಲಿ ಕೋಲಾಹಲ ಸೃಷ್ಟಿಯಾಗಿ, ಬಿಜೆಪಿ, ಜೆಡಿಎಸ್ ಸದಸ್ಯರು ಕಲಾಪದಿಂದ ಹೊರನಡೆದರು. ಮುಖ್ಯಮಂತ್ರಿಗಳು ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited