ಬೆಂಗಳೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ವಿರುದ್ಧವೆ ವಿಪಕ್ಷಗಳು ಮುಗಿಬಿದ್ದಿವೆ.
ವಿಧಾನಸಭೆಯ ಕಲಾಪದಲ್ಲಿ ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿ, ಸಾವಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿವೆ. ರವಿ ಪೋಷಕರನ್ನು ಕರೆತಂದು ಧರಣಿ ಮಾಡಿಸುವ ಮೂಲಕ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿರುವುದಾಗಿ ಆರೋಪಿಸಿದ್ದರು.
ಡಿ.ಕೆ.ರವಿ ಸಾವಿನ ಪ್ರಕರಣದಲ್ಲಿ ರಾಜಕಾರಣ ಮಾಡಿರುವುದೇ ಸಿದ್ದರಾಮಯ್ಯ. ರವಿ ಪ್ರಕರಣದಲ್ಲಿ ವಿಪಕ್ಷಗಳು ರಾಜಕೀಯ ಮಾಡಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಜನರ ಭಾವನೆಗೆ ತಕ್ಕಂತೆ ಪ್ರತಿಪಕ್ಷಗಳು ಹೋರಾಟ ಮಾಡಿವೆ. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿ ಎಂಬುದು ಜನರ ಭಾವನೆಯಾಗಿತ್ತು. ರಾಜ್ಯದಲ್ಲಿ ಸಿಐಡಿಗೆ ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣವೇ ಇಲ್ಲವಾಗಿತ್ತು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಒಂದು ವಾರದ ಹಿಂದೆಯೇ ಸಿಬಿಐಗೆ ಒಪ್ಪಿಸಬೇಕಿತ್ತು ಎಂದು ಹೇಳಿದರು.
ರವಿ ಪೋಷಕರ ಧರಣಿ ಮೂಲಕ ವಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿಕೆಯನ್ನು ಸದನದಲ್ಲಿ ಪ್ರತಿಭಟಿಸಲು ಹೋಗಿಲ್ಲ. ಯಾಕೆಂದರೆ ಕಾಲಹರಣ ಮಾಡಬಾರದೆಂದು ಪ್ರತಿಭಟಿಸಲು ಹೋಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು, ಡಿ.ಕೆ.ರವಿ ಮಹಿಳಾ ಅಧಿಕಾರಿಯೊಬ್ಬರಿಗೆ 44 ಬಾರಿ ಕಾಲ್ ಮಾಡಿರುವುದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಅವರು ಈ ಸಂದರ್ಭದಲ್ಲಿ ಸವಾಲು ಹಾಕಿದರು.
ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಎನ್ನುವುದು ಕೇವಲ ಪ್ರತಿಪಕ್ಷಗಳ ಅಭಿಪ್ರಾಯವಾಗಿರಲಿಲ್ಲ. ಇದು ರಾಜ್ಯದ ಆರು ಕೋಟಿ ಜನರ ಆಗ್ರಹವಾಗಿತ್ತು. ಮುಖ್ಯಮಂತ್ರಿಗಳು ಜನಾಭಿಪ್ರಾಯಕ್ಕೂ ಮನ್ನಣೆ ನೀಡದೇ ಕಾಂಗ್ರೆಸ್ ಹೈಕಮಾಂಡ್ ಆದೇಶಕ್ಕೆ ಮಣಿದಿದ್ದಾರೆ ಎಂದು ಆರೋಪಿಸಿದರು. ಇದೀಗ ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಸಿಬಿಐ ತನಿಖೆಗೆ ವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.