ನವದೆಹಲಿ : ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ ನಡೆಸದೇ ಜನಸೇವೆ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಘರ್ ವಾಪಸಿ ಬಗ್ಗೆ ಇತ್ತೀಚಿನ ದಿನಗಳಲ್ಲಿ ವಿವಾದಗಳುಂಟಾಗುತ್ತಿವೆ. ಆದರೆ ಮತಾಂತರ ಎಂಬುದನ್ನೇ ಏಕೆ ನಿಲ್ಲಿಸಬಾರದು ಎಂದು ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ. ಉಳಿದ ದೇಶಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲಿ ಎಂದು ಅಲ್ಪಸಂಖ್ಯಾತರೇ ಒತ್ತಾಯಿಸುತ್ತಾರೆ. ಆದರೆ ನಮ್ಮ ದೇಶದಲ್ಲಿ ಬಹುಸಂಖ್ಯಾತರು ಮತಾಂತರ ನಿಷೇಧ ಕಾಯ್ದೆಗೆ ಆಗ್ರಹಿಸುವ ಸ್ಥಿತಿ ಎದುರಾಗಿದೆ ಎಂದು ರಾಜನಾಥ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತಾಂತರ ನಡೆಸುವ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯಲಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಬಗ್ಗೆ ನಾವು ಯೋಚಿಸುತ್ತೇವೆ, ಈ ಬಗ್ಗೆ ನೀವೂ ಯೋಚನೆ ಮಾಡಬೇಕಿದೆ ಎಂದು ಅಲ್ಪಸಂಖ್ಯಾತ ಆಯೋಗದ ಸದಸ್ಯರಿಗೆ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ.
ಆರ್.ಎಸ್.ಎಸ್ ಹಾಗೂ ವಿಶ್ವಹಿಂದೂ ಪರಿಷತ್ ಸಂಘಟನೆ ಘರ್ ವಾಪಸಿ ಹೆಸರಿನಲ್ಲಿ ದೇಶಾದ್ಯಂತ ಮರುಮತಾಂತರ ನಡೆಸುತ್ತಿರುವುದರಿಂದ ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ.