ನವದೆಹಲಿ : ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸೀತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ-ಪಾಕಿಸ್ತಾನ ಪ್ರಧಾನಿಗಳ ಉದ್ದೇಶ ಒಂದೇ ಆಗಿದ್ದು, ಉಭಯ ದೇಶಗಳ ನಡುವಿನ ಮಾತುಕತೆ ಮುಂದುವರೆಸಲು ಇದು ಸೂಕ್ತ ಸಮಯ ಎಂದು ಬಸೀತ್ ಹೇಳಿದ್ದಾರೆ.
ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದನ್ನು ನಾವು ಎದುರು ನೋಡುತ್ತಿದ್ದೇವೆ. ಎರಡೂ ದೇಶಗಳ ಉದ್ದೇಶ ಒಂದೇ ಆಗಿರುವ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನದ ಸೌಹಾರ್ದಯುತ ಸಂಬಂಧ ಉತ್ತಮಗೊಳ್ಳಲಿದೆ ಎಂದು ಅಬ್ದುಲ್ ಬಸೀತ್ ಹೇಳಿದ್ದಾರೆ.
ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಉತ್ಸುಕವಾಗಿದ್ದು, ನಮ್ಮ ಸಮಸ್ಯೆಗಳನ್ನು ಬಲಪ್ರಯೋಗದಿಂದ ಬಗೆಹರಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ತಾವು ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತಕರಾರಿಲ್ಲ ಎಂದು ಅಬ್ದುಲ್ ಬಸೀತ್ ಹೇಳಿದ್ದಾರೆ.
ಪಾಕಿಸ್ತಾನ ದಿನಾಚರಣೆಯನ್ನು ಅಚರಿಸುವ ಹಿನ್ನೆಲೆಯಲ್ಲಿ ಹುರಿಯತ್ ಕಾನ್ಫರೆನ್ಸ್ ಪ್ರತ್ಯೇಕತಾವಾದಿಗಳನ್ನು ಅಬ್ದುಲ್ ಬಸೀತ್ ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅಬ್ದುಲ್ ಬಸೀತ್, ತಾವು ಹುರಿಯತ್ ಕಾನ್ಫರೆನ್ಸ್ ನಾಯಕರನ್ನು ಭೇಟಿ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ.