ನವದೆಹಲಿ : 'ಭ್ರಷ್ಟಾಚಾರ'ದ ಬಗ್ಗೆ ಸಾರ್ವಜನಿಕರು ತಮ್ಮ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಪ್ರಧಾನಿ ಕಾರ್ಯಾಲಯ ಹೊಸ ಯೋಜನೆಯನ್ನು ರೂಪಿಸಿದೆ. ಜನಸಾಮಾನ್ಯರು ತಮ್ಮ ಕುಂದುಕೊರತೆಗಳನ್ನು ದಾಖಲಿಸುವುದಕ್ಕಾಗಿಯೇ ಪ್ರಗತಿ ಎಂಬ ವೆಬ್ ಪೋರ್ಟಲ್ ನ್ನು ಪ್ರಾರಂಭಿಸಲು ನಿರ್ಧರಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಚಾಲ್ತಿಯಲ್ಲಿದ್ದ ಪಿ.ಎಂ.ಒ ಸಿ.ಪಿ.ಜಿ.ಆರ್.ಎಂ.ಎಸ್ ಎಂಬ ವೆಬ್ ಸೈಟ್ ಗಿಂತಲೂ ಇದು ವಿಭಿನ್ನವಾಗಿರಲಿದ್ದು, ಸರ್ಕಾರದ ವಿವಿಧ ಕಚೇರಿಗಳಲ್ಲಿ ನಡೆಯುವ ಭ್ರಷ್ಟಾಚಾರದ ಬಗ್ಗೆ ದೂರು ದಾಖಲಿಸಲು ಅವಕಾಶವಿರುತ್ತದೆ.
ಹೊಸ ವೆಬ್ ಸೈಟ್ ಗೆ ಮಾ.25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದೆ ವೇಳೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು, ಮುಖ್ಯಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಹಳೆಯ ವೆಬ್ ಸೈಟ್ ನಲ್ಲಿ ಎಲ್ಲಾ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಒಂದೇ ಕೆಟಗರಿ ಅಡಿಯಲ್ಲಿ ದೂರು ನೀಡಬೇಕಿತ್ತು. ಆದರೆ ಪ್ರಧಾನಿ ಮೋದಿ ಚಾಲನೆ ನೀಡಲಿರುವ ವೆಬ್ ಸೈಟ್ ನಲ್ಲಿ ಪ್ರತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಪ್ರತ್ಯೇಕವಾಗಿ ದೂರು ದಾಖಲಿಸಬಹುದಾಗಿದೆ. ಇದರಿಂದ ಪ್ರತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನಿಖರ ಮಾಹಿತಿ ಪಡೆಯಲು ಅನುಕೂಲವಾಗಲಿದೆ.