ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು ಸಾಲ ಮಾಡಬೇಡಿ ಎಂದು ಸಲಹೆ ನೀಡುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ನಾವೀಗ 1,80,815 ಕೋಟಿ ರೂಪಾಯಿ ಸಾಲದ ಭಾರದಲ್ಲಿದ್ದೇವೆ. ಬಿಜೆಪಿ ಸರ್ಕಾರ ಐದು ವರ್ಷಗಳ ಕಾಲ ಆಡಳಿತ ನಡೆಸಿದ ಸಂದರ್ಭದಲ್ಲಿ 45 ಸಾವಿರ ಕೋಟಿ ರೂಪಾಯಿ ಸಾಲ ಮಾಡಿದ್ದೇವು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೇ ವರ್ಷಗಳಲ್ಲಿ 42 ಸಾವಿರ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಹೇಳಿದರು.
ಹತ್ತು ಬಾರಿ ಬಜೆಟ್ ಮಂಡಿಸಿ, ಹಣಕಾಸು ಸಚಿವರಾಗಿ ಅನುಭವ ಹೊಂದಿರುವ ಸಿದ್ದರಾಮಯ್ಯನವರೇ ಈ ರೀತಿ ಸಾಲದ ಹೊರೆಯನ್ನು ಹೊರಿಸಿರುವುದು ಸರಿಯೇ ಎಂದು ಪ್ರಶ್ನಿಸಿದರು. ಇದರಿಂದಾಗಿ ಎಲ್ಲಾ ಭಾಗ್ಯಗಳ ಜೊತೆಗೆ ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕೊಟ್ಟಿದ್ದಾರೆ ಎಂದು ಟೀಕಿಸಿದರು.
ಈ ಹಿಂದಿನ ಬಜೆಟ್ ಅನ್ನು ಅಹಿಂದಾ ಪರ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಈ ಬಾರಿ ಮಾತ್ರ ಅಹಿಂದಾ ಪರ ಘೋಷಣೆಗಳನ್ನು ಮಾಡಲಾಗಿದೆ. ಸಿದ್ದರಾಮಯ್ಯನವರು ಮೂಲ ಕಾಂಗ್ರೆಸ್ಸಿಗರಲ್ಲ. ಆದರೆ ಕಾಂಗ್ರೆಸ್ಸಿಗರು ಅಹಿಂದಾ ವರ್ಗವನ್ನು ಬಳಸಿಕೊಂಡಿದ್ದಾರೆ ಎಂದು ದೂರಿದರು.