ಪಾಟ್ನಾ : 'ಬಿಹಾರ' ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಬಿಹಾರದಲ್ಲಿ ದಲಿತರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಏ.14ರಂದು ಅಂಬೇಡ್ಕರ್ ಜಯಂತಿ ಅಂಗವಾಗಿ ಮೆಗಾ ಈವೆಂಟ್ ಆಯೋಜಿಸಿದೆ.
ಪಾಟ್ನಾದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ, ದಲಿತರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬಿಹಾರ ರಾಜ್ಯಾದ್ಯಂತ ರ್ಯಾಲಿಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ದಲಿತರನ್ನು ಮುಖ್ಯವಾಹಿನಿಗೆ ತರುವುದೇ ಈ ರ್ಯಾಲಿಯ ಮುಖ್ಯ ಉದ್ದೇಶವಾಗಿದೆ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದುಷ್ಯಂತ್ ಕುಮಾರ್ ಗೌತಮ್ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿ ಅಂಗವಾಗಿ, ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಬಿಹಾರ ಬಿಜೆಪಿ ಘಟಕ ಪುಸ್ತಕವನ್ನು ಹೊರತರಲಿದೆ ಎಂದು ದುಷ್ಯಂತ್ ಕುಮಾರ್ ಗೌತಮ್ ತಿಳಿಸಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದ್ದ ಜಿತನ್ ರಾಮ್ ಮಾಂಝಿ ಅವರನ್ನು ಇತ್ತೀಚೆಗಷ್ಟೇ ಪದವಿಯಿಂದ ಕೆಳಗಿಳಿಸಿರುವ ಪ್ರಕರಣವನ್ನೂ ಸಹ ಬಿಜೆಪಿ ಚುನಾವಣೆ ವೇಳೆ ಸಮರ್ಥವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ.