ನವದೆಹಲಿ : ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ.
ನಮ್ಮ ಮಾಜಿ ಪ್ರಧಾನಿಗಳು ಭಾರತವಷ್ಟೇ ಪ್ರೀತಿಸುವ ನಾಯಕರಲ್ಲ, ಅವರನ್ನು ಇಡಿ ವಿಶ್ವವೇ ಪ್ರೀತಿಸುತ್ತದೆ. ಅವರು ಅಂತಾರಾಷ್ಟ್ರೀಯ ಐಕಾನ್ ಎಂದು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರೆಯುತ್ತಿರುವುದರಿಂದ ದೇಶದ ಸಮಸ್ತ ಜನತೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರ ವ್ಯಕ್ತಿತ್ವ, ಭಾಷಣದ ಕೌಶಲ್ಯ, ಪ್ರಾಮಾಣಿಕತೆ ಅವರ ಹಿರಿಮೆ ಸೂಚಿಸುತ್ತದೆ. ಅವರೊಬ್ಬ ಶ್ರೇಷ್ಠ ವ್ಯಕ್ತಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಶಿಷ್ಟಾಚಾರವನ್ನೂ ಬದಿಗೊತ್ತಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸಕ್ಕೇ ತೆರಳಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.