ಬೆಂಗಳೂರು : ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡುತ್ತಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದ ವಿಧಾನಪರಿಷತ್ ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತಿದೆ. ಈ ವೇಳೆ ಅಭಿನಂದನಾ ನಿರ್ಣಯವನ್ನು ಅಂಗೀಕರಿಸುವಂತೆ ಸಭಾಪತಿಗಳಲ್ಲಿ ಮನವಿ ಮಾಡಿದರು.
ಸಭಾಪತಿಗಳ ಅನುಮತಿ ಪಡೆದು ಅಭಿನಂದನಾ ನಿರ್ಣಯದ ಕುರಿತು ಮಾತನಾಡಿದ ಈಶ್ವರಪ್ಪ, ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುತ್ತಿರುವುದಕ್ಕೆ ಇಡೀ ವಿಶ್ವವೇ ಸಂತಸಪಡುತ್ತದೆ. ಅವರೊಬ್ಬ ಅಜಾತಶತೃ, ರಾಜಕೀಯ ಮುತ್ಸದ್ಧಿ ಎಂದು ಬಣ್ಣಿಸಿದರು.
ಸಭಾನಾಯಕ ಎಸ್.ಆರ್.ಪಾಟೀಲ್ ಮಾತನಾಡಿ, ವಾಜಪೇಯಿ ಮೇರು ವ್ಯಕ್ತಿತ್ವದ ರಾಜಕಾರಣಿ. ಅತ್ಯಂತ ಶ್ರೇಷ್ಠ ಮುತ್ಸದ್ಧಿಯಾಗಿ, ಸಂಸದೀಯ ಪಟುವಾಗಿ ನಮಗೆಲ್ಲ ಮಾರ್ಗದರ್ಶಕರಾಗಿದ್ದಾರೆ. ಅವರ ಮಾರ್ಗದರ್ಶನ ನಮಗೆಲ್ಲ ಅನುಕರಣೀಯ ಎಂದರು. ಕಾಂಗ್ರೆಸ್ ನಾಯಕರಾಗಿರುವ ಎಸ್.ಆರ್ ಪಾಟೀಲ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು.