ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಜೀವನವನ್ನೇ ರಾಷ್ಟ್ರ ಸೇವೆಗಾಗಿ ಮುಡಿಪಾಗಿಟ್ಟ ಅಟಲ್ ಬಿಹಾರಿ ವಾಜಪೇಯಿ ಅವರು ತಮಗೆ ಹಾಗೂ ಮುಂದಿನ ಪೀಳಿಗೆಗೆ ಸದಾ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಭಾರತ ರತ್ನ ನೀಡಿ ಗೌರವಿಸುವ ಅವಕಾಶ ದೊರೆತಿದ್ದು ಸೌಭಾಗ್ಯವೆಂದು ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಅಭಾರಿಯಾಗಿರುವುದಾಗಿ ಮೋದಿ ಇದೇ ವೇಳೆ ತಿಳಿಸಿದ್ದಾರೆ.
ಸಂಜೆ ನಡೆದ ಸರಳ ಸಮಾರಂಭದಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಜೆಡಿಯು ನಾಯಕ ಶರದ್ ಯಾದವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಾಷ್ಟ್ರಪತಿ ಭವನದಲ್ಲಿ ಮಾ.30ರಂದು ನಡೆಯಲಿರುವ ಸಮಾರಂಭದಲ್ಲಿ ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತದೆ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವಿಯಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಶಿಫಾರಸ್ಸಿಗೆ 2014ರ ಡಿಸೆಂಬರ್ ನಲ್ಲಿ ರಾಷ್ಟ್ರಪತಿಗಳು ಅಂಕಿತ ಹಾಕಿ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದರು.