ಬೆಂಗಳೂರು : ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಗೆ ಕಂಟಕ ಎದುರಾಗಿದೆ.
ಐಎಎಸ್ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು ಪ್ರಕಾಶ್ ಅವರದ್ದೇ ಎಂಬುದು ಲೋಕಾಯುಕ್ತ ಸಂಸ್ಥೆಯ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.
ಲೋಕಾಯುಕ್ತ ಸಂಸ್ಥೆಯ ಹೆಚ್ಚುವರಿ ರಿಜಿಸ್ಟ್ರಾರ್ ಎಂ.ಎಸ್.ಬಾಲಕೃಷ್ಣ ಈ ಕುರಿತ ದೂರಿನ ವಿಚಾರಣೆ ನಡೆಸಿದ್ದು, ಈ ವೇಳೆ ದೂರವಾಣಿ ಸಂಭಾಷಣೆಯಲ್ಲಿರುವ ಧ್ವನಿ ವರ್ತೂರು ಪ್ರಕಾಶ್ ಅವರದ್ದು ಎಂದು ಪ್ರಾಥಮಿಕ ತನಿಖೆಯಲ್ಲಿ ಖಚಿತಪಟ್ಟಿರುವುದಾಗಿ ವರದಿ ನೀಡಿದ್ದಾರೆ.
ಪ್ರಕರಣವು ಭ್ರಷ್ಟಾಚಾರ ನಿಗ್ರಹ ವ್ಯಾಪ್ತಿಗೆ ಬರುವುದರಿಂದ ಬಾಲಕೃಷ್ಣ ನೀಡಿರುವ ವರದಿ ಆಧಾರದ ಮೇಲೆ ಹೆಚ್ಚಿನ ತನಿಖೆಗೆ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಮುಂದಿನ ತನಿಖೆಗೆ ಮತ್ತು ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ವರದಿಯನ್ನು ಲೋಕಾಯುಕ್ತ ಎಡಿಜಿಪಿ ಪ್ರೇಮಶಂಕರ್ ಮೀಣ ಅವರಿಗೆ ನೀಡಲಾಗಿದೆ. ಬಾಲಕೃಷ್ಣ ಅವರ ವರದಿ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬಿ.ಹರೀಶ್ ಕುಮಾರ್ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ಎಂಬವರು ಐಎಎಸ್ ಅಧಿಕಾರಿ ಡಿ.ಕೆ.ರವಿ ಅಸಹಜ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ವರ್ತೂರು ಪ್ರಕಾಶ್ ಅವರು ಸರ್ಕಾರಿ ಅಧಿಕಾರಿಯೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋವನ್ನು ಲೋಕಾಯುಕ್ತ ಸಂಸ್ಥೆಗೆ ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಸಂಸ್ಥೆಯು ವಿಚಾರಣೆ ನಡೆಸಿತು.
ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಅಧಿಕಾರಿ ಮತ್ತು ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಅವರ ನಡುವಿನ ಸಂಭಾಷಣೆಯ ಆಡಿಯೋ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ್ದರು. ಲೋಕಾಯುಕ್ತ ಸಂಸ್ಥೆಗೆ ಸಲ್ಲಿಕೆಯಾದ ಆಡಿಯೋವನ್ನು ಹೆಚ್ಚಿನ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಲೋಕಾಯುಕ್ತ ಸಂಸ್ಥೆಯ ಮೂಲಗಳು ತಿಳಿಸಿವೆ.