ಶ್ರೀನಗರ : ಕಳೆದ ಎರಡು ದಿನಗಳಿಂದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.
ಹವಾಮಾನ ಇಲಾಖೆ ಕಾಶ್ಮೀರದಲ್ಲಿ ಭಾರೀ ಪ್ರವಾಹದ ಎಚ್ಚರಿಕೆ ನೀಡಿದೆ. ಇಲಾಖೆಯ ವರದಿಗಳ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ನದಿ ಅಂಚಿನ ಜನರು ಕೂಡಲೇ ಆ ಜಾಗವನ್ನು ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಇದೇ ವೇಳೆ ರಾಜ್ಯದಲ್ಲಿರುವ ಹಿಮನದಿಗಳಲ್ಲಿನ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕಾಶ್ಮೀರ ಸರ್ಕಾರ ಪ್ರವಾಹ ಪರಿಸ್ಥಿತಿ ಘೋಷಣೆ ಮಾಡಿದೆ. ಅಲ್ಲದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದ್ದಿಗಳಿಗೆ ಸರ್ಕಾರ ಸೂಚನೆ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಸನ್ನದ್ಧವಾಗಿರುವಂತೆ ನಿರ್ದೇಶನ ನೀಡಿದೆ.
ಇದೇ ಏಪ್ರಿಲ್ 3ರಂದು ಕಾಶ್ಮೀರ ರಾಜ್ಯದಾದ್ಯಂತ ರಾತ್ರಿ ಇಡೀ ಭಾರಿ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯಿಂದಾಗಿ ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.
ಇನ್ನು ಶ್ರೀನಗರ ಮತ್ತು ಜಮ್ಮುವಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನು ರಾಜ್ಯದ 7 ಜಿಲ್ಲೆಗಳಲ್ಲಿ ಪ್ರವಾಹವಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಧಾರಾಕಾರವಾಗಿ ಮಳೆಯಿಂದಾಗಿ ಕೇಂದ್ರ ಬದಗಾಮ್ ಜಿಲ್ಲೆಯಲ್ಲಿ 8 ಮನೆಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಇದಲ್ಲದೆ ಇತರೆ 26 ಮನೆಗಳು ಬಹುತೇಕ ಹಾನಿಗೀಡಾಗಿವೆ. ಝೇಲಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪೂಂಚ್ ಜಿಲ್ಲೆಯ ಕಲೈ ಗ್ರಾಮದಲ್ಲಿ ಸಿಲುಕಿರುವ ಗ್ರಾಮಸ್ಥರು ಮನೆಯಿಂದ ಹೊರ ಬರಲಾರದೇ ಪರದಾಡುತ್ತಿದ್ದಾರೆ.
ಇದೇ ವೇಳೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೂರಕ್ಕೂ ಹೆಚ್ಚು ವಿವಿಧ ಪಡೆಗಳು ಕಾಶ್ಮೀರ ರಾಜಧಾನಿ ಶ್ರೀನಗರಕ್ಕೆ ದೌಡಾಯಿಸಿದ್ದು, ಪ್ರವಾಹದ ಕುರಿತ ಮಾಹಿತಿ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚ್ರುಕುಗೊಳಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕಳೆದ ವರ್ಷವಷ್ಟೇ ಭಾರೀ ಪ್ರವಾಹಕ್ಕೆ ಸಿಲುಕಿದ್ದ ಜಮ್ಮು-ಕಾಶ್ಮೀರ ಜನತೆ ಈಗ ಮತ್ತೆ ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.