ನವದೆಹಲಿ : 'ಬಿಜೆಪಿ' ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಏ.2ರಂದು ಮಧ್ಯಾಹ್ನ 3:30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಪಕ್ಷ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಮನ್ವಯತೆ ಮತ್ತು ಪಕ್ಷ ಬಲವರ್ಧನೆ ಕುರಿತು ಪದಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸುತ್ತಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿಷ್ಟಾಚಾರದ ಪ್ರಕಾರ ರಾಜ್ಯಪಾಲ ವಜುಭಾಯ್ ವಾಲ ಹಾಗೂ ಸಿ.ಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ತೆರಳಿ, ಅಲ್ಲಿಂದ ಪಕ್ಷದ ಕಾರ್ಯಕಾರಣಿ ಸಭೆ ನಡೆಯುತ್ತಿರುವ ಅಶೋಕ ಹೋಟೆಲ್ ಗೆ ಆಗಮಿಸಿದ ಪ್ರಧಾನಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಪುಷ್ಪಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು.
ಪ್ರಧಾನಿ ಮೋದಿ ಇಂದಿನಿಂದ ಮೂರು ದಿನಗಳು ಬೆಂಗಳೂರಿನಲ್ಲಿ ಇರಲಿದ್ದಾರೆ. ಮೂರು ದಿನಗಳು ನಡೆಯಲಿರುವ ಈ ಸಭೆಯಲ್ಲಿ ಪಕ್ಷ ಸಂಘಟನೆ, ಕರ್ನಾಟಕದಲ್ಲಿ ಬಿಜೆಪಿ ಬಲವರ್ಧನೆ, ಚುನಾವಣಾ ತಂತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.