Basavanagudi : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಬಹಿರಂಗ ಸಮಾವೇಶ ಇದಾಗಿದೆ.
ನರೇಂದ್ರ ಮೋದಿ ಜೊತೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಷಿ ಮಾತ್ರ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಉಳಿದಂತೆ ಯಾವ ನಾಯಕರಿಗೂ ಭಾಷಣಕ್ಕೆ ಅವಕಾಶ ನೀಡಿಲ್ಲ.
ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಇದೇ ಕ್ರೀಡಾಂಗಣದಲ್ಲಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಆದರೆ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಧಾನಿಯಾದ ಮೇಲೆ ಈ ಕ್ರೀಡಾಂಗಣದಲ್ಲಿ ಮಾಡುತ್ತಿರುವ ಮೊಟ್ಟಮೊದಲ ಸಾರ್ವಜನಿಕ ಭಾಷಣ ಇದಾಗಿದೆ. ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಪಡೆಗಳು ಸೇರಿದಂತೆ 1500 ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.