BW News Bureau : ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಬಗ್ಗೆ ಸುಗ್ರೀವಾಜ್ನೆ ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ, ಬಿಬಿಎಂಪಿಯಲ್ಲಿ ನಡೆದಿರುವ ಕಾಮಗಾರಿಗಳ ತನಿಖೆಯನ್ನು ಸಿಐಡಿಗೆ ವಹಿಸಲೂ ತೀರ್ಮಾನಿಸಲಾಗಿದೆ.
ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಬೇಕಾದ ಪರಿಸ್ಥಿತಿ ಒದಗಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ ಸಭೆ ನಡೆಸಿದರು. ಈ ಸಭೆಯಲ್ಲಿ ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಕಾಯಿದೆಯನ್ನು ಜಾರಿಗೆ ತರಬೇಕಾದರೆ ವಿಧಾನಮಂಡಲದ ಅಧಿವೇಶನ ಕರೆಯಬೇಕು. ಅದು ಈಗ ಸಾಧ್ಯವಿಲ್ಲ. ಹೀಗಾಗಿ, ಸುಗ್ರೀವಾಜ್ಞೆ ಮೂಲಕ ಕಾಯಿದೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ನಿರ್ದಿಷ್ಟ ಸೂಚನೆಯೂ ಇದೆ. ಹೀಗಾಗಿ, ನ್ಯಾಯಾಂಗ ನಿಂದನೆಯೂ ಆಗಬಾರದು ಎಂಬ ಕಾರಣಕ್ಕೆ ಬಿಬಿಎಂಪಿಯ 198 ವಾರ್ಡ್ಗಳಿಗೆ ಮೀಸಲು ಪಟ್ಟಿ ಪ್ರಕಟಿಸುವ ಪ್ರಕ್ರಿಯೆಗೆ ತಡೆ ಬೇಡ. ಅದು ಪ್ರಕಟವಾಗಲಿ. ಆದರೆ, ಸುಗ್ರೀವಾಜ್ಞೆ ಹೊರಡಿಸೋಣ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದರ ಜತೆಯಲ್ಲೇ ಬಿಬಿಎಂಪಿಯಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳು, ಅವ್ಯವಹಾರಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿರುವ ವರದಿಯನ್ನು ಆಧರಿಸಿ ಎಲ್ಲ ಕಾಮಗಾರಿಗಳ ತನಿಖೆ ನಡೆಸಲು ಸಿಐಡಿಗೆ ಪ್ರಕರಣ ವಹಿಸಬೇಕೆಂದೂ ನಿರ್ಧರಿಸಲಾಗಿದೆ.