ನವದೆಹಲಿ : ನ್ಯಾಯಾಂಗ ವ್ಯವಸ್ಥೆಯ ಮೇಲೆ ದೇಶದ ಜನ ಅಪಾರ ವಿಶ್ವಾಸ ಮತ್ತು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆ ಸಮರ್ಥ ಮತ್ತು ಸಶಕ್ತವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಮುಖ್ಯಮಂತ್ರಿಗಳು ಹಾಗೂ ನ್ಯಾಯಮೂರ್ತಿಗಳ ಜಂಟಿ ಸಮಾವೇಶಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಸಭೆಯನ್ನುದ್ದೇಶಿಸಿ ಮಾತನಾಡಿದರು.
ನ್ಯಾಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡುವುದು ಪವಿತ್ರವಾದ ದೇವರ ಕೆಲಸವಾಗಿದೆ. ನ್ಯಾಯಮೂರ್ತಿಗಳ ಮೇಲೆ ಜನರು ಅಪಾರ ವಿಶ್ವಾಸವಿಟ್ಟುಕೊಂಡಿದ್ದಾರೆ ಮತ್ತು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಹೀಗಾಗಿ ನ್ಯಾಯ ವ್ಯವಸ್ಥೆಯಲ್ಲಿ ಒಳ್ಳೆಯ ಜನರು ಭಾಗಿಯಾಗಬೇಕಿದೆ ಎಂದು ಅಭಿಪ್ರಾಯ ಪಟ್ಟರು.
ನ್ಯಾಯ ದೋರಕಿಸಿಕೊಡುವಲ್ಲಿ ಗಮನವಿಟ್ಟು ಸರಿಯಾದ ಹಾದಿಯಲ್ಲಿ ನಡೆದು ಸಮರ್ಥ,ಸಶಕ್ತ ನ್ಯಾಯ ವ್ಯವಸ್ಥೆ ನಮ್ಮದಾಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಇದೇ ವೇಳೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಮುಂದಿನ ಪೀಳಿಗೆಯನ್ನು ನೀವು ತಯಾರು ಮಾಡಬೇಕಾಗಿದೆ ಎಂದು ನ್ಯಾಯಮೂರ್ತಿಗಳಿಗೆ ಕರೆ ನೀಡಿದರು.