ಮೈಸೂರು : ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಸಿದ್ದರಾಮಯ್ಯ ಕೇಂದ್ರದಿಂದ ಅನುದಾನ ಕಡಿತಗೊಳಿಸಲಾಗಿದೆ. ಕೇಂದ್ರದಿಂದ ಬರಬೇಕಾದ 19 ಸಾವಿರ ಕೋಟಿ ರೂ.ಅನುದಾನ ಕಡಿಮೆಯಾಗಿದೆ. ಆದ್ದರಿಂದ ರಾಜ್ಯದ ಹಲವಾರು ಕಾಮಗಾರಿಗಳು ಸ್ಥಗಿತಗೊಂಡಿದ್ದು, ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರವೇ ಮಾಡಬೇಕಿರುವುದರಿಂದ ಸರ್ಕಾರಕ್ಕೆ 4,089 ಕೋಟಿ ರೂ. ಹೊರೆಯಾಗಲಿದೆ ಎಂದರು.
ಐಐಟಿ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯದ ಯಾವುದೇ ಭಾಗದಲ್ಲಿ ಐಐಟಿ ಸ್ಥಾಪನೆಯಾದರೂ ಸಂತಸ ಎಂದು ತಿಳಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತಂತೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ನಂತರ ಇದನ್ನು ಕೇಂದ್ರಕ್ಕೆ ಅನುಮತಿಗಾಗಿ ಕಳುಹಿಸಲಾಗುವುದು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.