BW News Bureau : ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ.
ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ. ಆದ್ದರಿಂದ ಬಿಜೆಪಿ ರಾಜ್ಯಪಾಲರಿಗೆ ಅಂಕಿತ ಹಾಕದಂತೆ ಒತ್ತಡ ಹೇರುವ ಕಾರ್ಯತಂತ್ರ ರೂಪಿಸಿದೆ. ಸರ್ಕಾರ ವಿಭಜನೆಗೆ ಪಟ್ಟು ಹಿಡಿದು ಸುಗ್ರೀವಾಜ್ನೆ ತರಲು ಮುಂದಾದರೆ ಬಿಜೆಪಿಯ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸುಗ್ರೀವಾಜ್ಞೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಅನುಸರಿಸುವ ನಡೆಯನ್ನೇ ಬಿಜೆಪಿ ಕಾದು ನೋಡುತ್ತಿದೆ.
ಆಡಳಿತಾತ್ಮಕ ದೃಷ್ಟಿಯಿಂದ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮೂರು ಭಾಗಗಳಾಗಿ ವಿಭಜನೆ ಮಾಡಲು ಈಗಾಗಲೇ ತೀರ್ಮಾನಿಸಿದೆ. ಈ ಸಂಬಂಧ ಅಧಿಕೃತ ಕಾಯ್ದೆ ಮಾತ್ರ ಜಾರಿಗೆ ಬರಬೇಕಾಗಿದೆ. ಕಾಂಗ್ರೆಸ್ ಹೊರತುಪಡಿಸಿ ಉಳಿದ ರಾಜಕೀಯ ಪಕ್ಷಗಳು ಕೂಡ ವಿಭಜನೆಗೆ ವಿರೋಧ ವ್ಯಕ್ತಪಡಿಸುತ್ತಿವೆ.
ಸರ್ಕಾರ ಬಿಬಿಎಂಪಿ ವಿಭಜನೆ ಪ್ರಸ್ತಾವ ಕೈ ಬಿಡದಿದ್ದರೆ ಬೀದಿಗಿಳಿದು ಹೋರಾಡುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿಯನ್ನು ವಿಭಜನೆ ಮಾಡುವುದು ಖಚಿತ ಎಂದು ಕಾನೂನು ಸಚಿವ ಟಿ.ಬಿ ಜಯಚಂದ್ರ ಸ್ಪಷ್ಟಪಡಿಸಿದ್ದರು.