ಪ್ಯಾರಿಸ್ : 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಭಾರತದ ತೀವ್ರ ವಿರೋಧದ ನಡುವೆಯೂ ರಹಸ್ಯವಾಗಿ ಜೈಲಿನಿಂದ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ, ಜಗತ್ತಿನಲ್ಲಿ ಯಾವುದೇ ರಾಷ್ಟ್ರಗಳು ಉಗ್ರರಿಗೆ ಆಶ್ರಯ ನೀಡಬಾರದು, ಉಗ್ರರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ. ಉಗ್ರವಾದದ ವಿರುದ್ಧ ಹೋರಾಡಲು ಜಾಗತಿಕ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕಿದೆ. ಉಗ್ರರಿಗೆ ಆಶ್ರಯ ನೀಡುವುದಿಲ್ಲ ಎಂದು ಎಲ್ಲಾ ರಾಷ್ಟ್ರಗಳು ಪ್ರತಿಜ್ನೆ ಮಾಡಬೇಕಿದೆ ಎಂದು ಮೋದಿ ಕರೆ ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ಫ್ರಾನ್ಸ್ ಅಧ್ಯಕ್ಷ ಹೊಲಾಂಡ್, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಬಿಡುಗಡೆ ಮಾಡಿರುವುದಕ್ಕೆ ಭಾರತದಿಂದ ವ್ಯಕ್ತವಾಗುತ್ತಿರುವ ಆಕ್ರೋಶ ತಮಗೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.
ಪ್ಯಾರೀಸ್ ನಲ್ಲಿ ಇತ್ತೀಚೆಗಷ್ಟೇ ನಡೆದ ಉಗ್ರರ ದಾಳಿ ಹಾಗೂ ಲಖ್ವಿಯನ್ನು ಬಿಡುಗಡೆ ಮಾಡಿರುವ ವಿಷಯಗಳ ಬಗ್ಗೆ ಮಾತನಾಡಿದ ಉಭಯ ನಾಯಕರು, ಉಗ್ರವಾದವನ್ನು ತಡೆಗಟ್ಟುವ ಬಗ್ಗೆ ಚರ್ಚೆ ನಡೆಸಲಾಯಿತು.