ಬೆಂಗಳೂರು : 'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಸೇರಿರುವ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ಶಾಸಕ ಆನಂದ್ ಸಿಂಗ್ ಪತ್ರದಲ್ಲಿ ತಿಳಿಸಿದ್ದಾರೆ.
ಬೆಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ್ ಸಿಂಗ್ 2013ರ ಅಕ್ಟೋಬರ್ ನಲ್ಲಿ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದರು. 2015ರ ಜ.24ರಂದು ಸಿಬಿಐ ವಿಶೇಷ ನ್ಯಾಯಾಲಯ ಆನಂದ್ ಸಿಂಗ್ ಗೆ ಜಾಮೀನು ನೀಡಿತ್ತು. ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಲೋಕಾಯುಕ್ತ ವಿಶೇಷ ತನಿಖಾ ತಂಡ ಕಳೆದ ಗುರುವಾರ ಆನಂದ್ ಸಿಂಗ್ ಅವರನ್ನು ಮತ್ತೆ ಬಂಧಿಸಿತ್ತು.