ನವದೆಹಲಿ : ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ.
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ.
ಸಂಸತ್ ನಲ್ಲಿ ಮತಾಂತರದ ವಿಷಯದ ಬಗ್ಗೆ ತೀವ್ರ ಚರ್ಚೆ ನಡೆದಾಗ, ಮತಾಂತರ ನಿಷೆಧ ಕಾಯ್ದೆ ಜಾರಿಗೊಳಿಸುವ ಸಂಬಂಧ ಗೃಹ ಇಲಾಖೆ, ಕಾನೂನು ಸಚಿವಾಲಯದ ಸಲಹೆ ಕೇಳಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವಾಲಯ, ಮತಾಂತರದ ವಿಷಯ ಸಂಪೂರ್ಣವಾಗಿ ರಾಜ್ಯಗಳಿಗೆ ಸಂಬಂಧಿಸಿರುವ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ಕಾನೂನು ತರಲು ಅವಕಾಶ ಇಲ್ಲ ಎಂದು ಹೆಳಿದೆ.
ಒಡಿಶಾ ಹಾಗೂ ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೆಧ ಕಾಯ್ದೆಗೆ ಸಂಬಂಧಿಸಿದಂತೆ 1977ರಲ್ಲಿ ಸುಪ್ರೀಂ ಕೋರ್ಟ್ ನ ತೀರ್ಪನ್ನು ಉಲ್ಲೇಖಿಸಿರುವ ಕಾನೂನು ಸಚಿವಾಲಯ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದರ ಸಂಬಂಧ ರಾಜ್ಯಸರ್ಕಾರದ ಪರಮಾಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿತ್ತು ಎಂದು ಹೇಳಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ವಿ.ಹೆಚ್.ಪಿ ನಡೆಸಿದ್ದ ಘರ್ ವಾಪಸಿ ಕಾರ್ಯಕ್ರಮದಿಂದಾಗಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯುತ್ತಿದೆ.