ಬೆಂಗಳೂರು : ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರಾಜಧಾನಿ ಬೆಂಗಳೂರು, ಮೈಸೂರು, ಮಡಿಕೇರಿ, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಆಚರಿಸಲಾಗುತ್ತಿದೆ.
ಇನ್ನು ತುರ್ತು ಸೇವೆಗಳಾದ ಔಷಧಿಗಳು, ಹಾಲು, ಆ್ಯಂಬುಲೆನ್ಸ್, ಆಸ್ಪತ್ರೆಗಳು ಯಥಾಸ್ಥಿತಿಯಂತೆ ಕಾರ್ಯನಿರ್ವಹಿಸುತ್ತಿವೆ. ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳು, ಪೆಟ್ರೋಲ್ ಬಂಕ್ ಗಳು, ಶಾಲಾ-ಕಾಲೇಜುಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ರೀತಿಯ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.
ರಾಜ್ಯದ ಪ್ರಮುಖ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರಗಳಲ್ಲಿ ಬಸ್ ಸಂಚಾರ ಬಹುತೇಕ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನು ನಾಳೆ ಕೆಎಎಸ್ ಪರೀಕ್ಷೆ ಇದ್ದು, ರಾಜ್ಯದ ನಾನಾ ಭಾಗಗಳಿಂದ ನೂರಾರು ಮಂದಿ ಪರೀಕ್ಷೆ ಬರೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಬ್ಧವಾಗಿದ್ದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇನ್ನು ಮುಂಜಾನೆ ಕಾರ್ಯನಿರ್ವಹಿಸುತ್ತಿದ್ದ ಬಿಎಂಟಿಸಿ ಬಸ್ ಗಳು ಬೆಳಗ್ಗೆ 8 ಗಂಟೆಯ ಬಳಿಕ ತಮ್ಮ ಸೇವೆಯನ್ನು ನಿಲ್ಲಿಸಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಹೊರ ಜಿಲ್ಲೆಗಳಿಗೆ ಸಂಚರಿಸಬೇಕಿದ್ದ ಎಲ್ಲ ಕೆಎಸ್ ಆರ್ ಟಿಸಿ ಬಸ್ ಗಳನ್ನು ಸ್ಥಗಿತಗೊಳಿಸಲಾಗಿದೆ.
ಮೇಕೆದಾಟು ಯೋಜನೆಗೆ ತಮಿಳುನಾಡು ರಾಜ್ಯ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕನ್ನಡ ಚಳವಳಿ ವಾಟಾಳ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬಂದ್ ಆಚರಿಸುತ್ತಿವೆ. ಚಾಮರಾಜನಗರದಲ್ಲಿ ಬಂದ್ ಆಚರಿಸುತ್ತಿರುವ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮತ್ತು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಪ್ರತಿಕೃತಿ ಧಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.