ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ.
ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಿರಿರಾಜ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಪ್ರಧಾನಿ ಮೋದಿ ಕ್ಷಮೆ ಕೋರಬೇಕೆಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಗಿರಿರಾಜ್ ಸಿಂಗ್ ಕ್ಷಮೆ ಯಾಚಿಸಿದ್ದಾರೆ.
ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಗಿರಿರಾಜ್ ಸಿಂಗ್, ದೇಶದ ಸಮಸ್ತ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಒತ್ತಾಯಿಸಿದರು.
ಪ್ರತಿಪಕ್ಷಗಳ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಗಿರಿರಾಜ್ ಸಿಂಗ್ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಾರೆ, ದಯವಿಟ್ಟು ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ಸೋನಿಯಾ ಗಾಂಧಿ ಬೆಳ್ಳಗಿರದಿದ್ದರೆ ಆಕೆಗೆ ಕಾಂಗ್ರೆಸ್ ಪಕ್ಷ ಅಧ್ಯಕ್ಷೆ ಸ್ಥಾನ ನೀಡುತ್ತಿತ್ತೇ? ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದರು.