ಬೆಂಗಳೂರು : ಎ.29 ಮತ್ತು 30ರಂದು ನಡೆಯಬೇಕಿದ್ದ ಈ ಬಾರಿಯ ಸಿಇಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ.
ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ಎ.30ರಂದು ಕರೆನೀಡಿರುವ ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡುವಂತೆ ಸರಕಾರದಿಂದ ಬಂದ ಸೂಚನೆ ಹಿನ್ನೆಲೆಯಲ್ಲಿ ಮೇ 12 ಮತ್ತು 13ನೇ ದಿನಕ್ಕೆ ಸಿಇಟಿ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ಸಾರಿಗೆ ಮತ್ತು ಸುರಕ್ಷತಾ ಕಾಯ್ದೆ 2014ರ ವಿರುದ್ಧ ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ಎ.30ರಂದು ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಹಾಗೂ ಇತರ ಸಾರಿಗೆ ನೌಕರರ ಸಂಘಟನೆಗಳೂ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಸಾರಿಗೆ ಸಂಚಾರ ವ್ಯತ್ಯಯ ಅಥವಾ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ.
ಇದರಿಂದ ಅಂದು ಪರೀಕ್ಷೆ ಮುಂದೂಡಲಾಗಿದ್ದು, ಹೆಚ್ಚಿನ ವಿವರಗಳನ್ನು ಕೆಇಎ ವೆಬ್ಸೈಟ್ http://www.kea.kar.nic.in ನಲ್ಲಿ ವೀಕ್ಷಿಸಬಹುದು ಎಂದು ಪ್ರಾಧಿಕಾರ ತಿಳಿಸಿದೆ.