ನವದೆಹಲಿ : 'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ. ಕೃಷಿಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದರಿಂದ ತಮ್ಮ ಮನಸ್ಸಿಗೆ ನೋವುಂಟಾಗಿದೆ ಎಂದು ಮೋದಿ ಹೇಳಿದ್ದಾರೆ. ಜೀವಕ್ಕಿಂತ ಯಾವುದೂ ದೊಡ್ಡದಲ್ಲ. ಎಲ್ಲರೂ ಸೇರಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದ್ದಾರೆ.
ಇದೇ ವೇಳೆ ರೈತರ ಆತ್ಮಹತ್ಯೆಯನ್ನು ತಡೆಗಟ್ಟಲು ವಿಪಕ್ಷಗಳು ನೀಡುವ ಸಲಹೆಯನ್ನು ಮುಕ್ತಮನಸ್ಸಿನಿಂದ ಸ್ವೀಕರಿಸಲು ಸಿದ್ಧವಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಸಂಸತ್ ಗೆ ಸ್ಪಷ್ಟಪಡಿಸಿದ್ದಾರೆ. ರೈತರಿಗಾಗಿ ಉಜ್ವಲ ಭವಿಷ್ಯವನ್ನು ರೂಪಿಸಲು ಒಗ್ಗೂಡಿ ಪ್ರಯತ್ನಿಸೋಣ, ಕಳೆದ 10 ತಿಂಗಳಲ್ಲಿ ಎಲ್ಲಿ ತಪ್ಪುಮಾಡಿದ್ದೇವೆಂದು ತಿಳಿದುಕೊಳ್ಳಬೇಕಿದೆ ಎಂದು ಪ್ರಧಾನಿ ಹೇಳಿದ್ದಾರೆ. ರೈತರು ಎಂದಿಗೂ ಅಸಹಾಯಕರಲ್ಲ. ಅವರಿಗಾಗಿ ನಾವು ಉತ್ತಮ ಭವಿಷ್ಯವನ್ನು ರೂಪಿಸುವ ಅಗತ್ಯವಿದೆ. ಇದಕ್ಕೆ ಒಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕು ಎಂದು ಮೋದಿ ವಿಪಕ್ಷ ಸದಸ್ಯರಿಗೆ ಕರೆ ನೀಡಿದ್ದಾರೆ.
ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿದ್ದ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕೆಂದು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಿದ್ದಾರೆ.