ನವದೆಹಲಿ : 'ಆಮ್ ಆದ್ಮಿ ಪಕ್ಷ' ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೃತಪಟ್ಟ ರಾಜಸ್ಥಾನದ ಮೂಲದ ರೈತನ ಕುಟುಂಬಕ್ಕೆ ಆಮ್ ಆದ್ಮಿ ಪಕ್ಷ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಏ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು. ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಜಸ್ಥಾನ ಮೂಲದ ರೈತ ಗಜೇಂದ್ರ ಸಿಂಗ್, ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಲಿದೆ ಎಂದು ಆಪ್ ಮುಖಂಡ ಸಂಜಯ್ ಸಿಂಗ್ ತಿಳಿಸಿದ್ದಾರೆ.
ಇದೇ ವೇಳೆ ರೈತ ಮೃತಪಟ್ಟಿರುವುದಕ್ಕೆ ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್, ದೆಹಲಿ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ. ದೆಹಲಿ ಪೊಲೀಸರು ರೈತ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಬಹುದಾಗಿತ್ತು ಎಂದು ಹೇಳಿದ್ದಾರೆ.
ಏ.22ರಂದು ಏನಾಗಿದೆ ಎಂಬುದು ಕ್ಯಾಮರಾಗಳಲ್ಲಿ ದಾಖಲಾಗಿದೆ. ಪೊಲೀಸರ ಕಾರ್ಯಾಚರಣೆ ಸೂಕ್ತವಾಗಿದ್ದಿದ್ದರೆ ಗಜೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟಬಹುದಿತ್ತು ಎಂದು ಸಂಜಯ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.