ಬೆಂಗಳೂರು : ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ಸೂಚಿಸಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಹಾಗೂ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಪಾಳಕ್ಕೆ ಕಳುಹಿಸಿಕೊಡಲಾಗಿದೆ.
ಇದಲ್ಲದೆ, ಭೂಕಂಪ ಪೀಡಿತ ನೇಪಾಳದಲ್ಲಿ ಅಗತ್ಯ ವೈದ್ಯಕೀಯ ಸೇವೆ ಒದಗಿಸಲು ಕೂಡ ರಾಜ್ಯ ಸರ್ಕಾರ ಯೋಚಿಸುತ್ತಿದೆ. ಅದಕ್ಕಾಗಿ ಅಗತ್ಯವಿದ್ದಲ್ಲಿ ನೇಪಾಳಕ್ಕೆ ಕಳುಹಿಸಲು ವೈದ್ಯರ ತಂಡವನ್ನು ಸಜ್ಜುಗೊಳಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ನೇಪಾಳ ಮತ್ತು ಉತ್ತರ ಭಾರತದ ಹಲವೆಡೆ ಭೂಕಂಪ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ಕರೆದು ಭೂಕಂಪ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಭೂಕಂಪದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ನೇಪಾಳಕ್ಕೆ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಬೇಕು. ಕೇಂದ್ರ ಸರ್ಕಾರದೊಡನೆ ಸತತ ಸಂಪರ್ಕದಲ್ಲಿರಬೇಕು ಮತ್ತು ಮಾಹಿತಿ ವಿನಿಮಯಕ್ಕೆ ಪೂರಕವಾಗುವಂತೆ ಬೆಂಗಳೂರಿನಲ್ಲಿ ನಿಯಂತ್ರಣಾ ಕೊಠಡಿ ಸ್ಥಾಪಿಸಬೇಕು ಎಂದು ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಭೂಕಂಪ ಸಂತ್ರಸ್ತರಿಗೆ ನೆರವು ಮತ್ತು ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಐಎಎಸ್ ಅಧಿಕಾರಿಯಾಗಿರುವ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಮತ್ತು ಐಪಿಎಸ್ ಅಧಿಕಾರಿಯಾಗಿರುವ ಬೆಳಗಾವಿ ವಿಭಾಗದ ಡಿಜಿಪಿ ಉಮೇಶ್ ಕುಮಾರ್ ಅವರು ರಾಜ್ಯ ಸರ್ಕಾರದ ಸೂಚನೆಯಂತೆ ಶನಿವಾರ ಸಂಜೆಯೇ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ಅಲ್ಲಿಂದ ರಸ್ತೆ ಮಾರ್ಗದಲ್ಲಿ ನೇಪಾಳಕ್ಕೆ ಹೊರಟಿದ್ದಾರೆ. ಭಾನುವಾರದಿಂದ ಅವರು ನೇಪಾಳದಲ್ಲಿ ತಮ್ಮ ಕೆಲಸ ಆರಂಭಿಸಲಿದ್ದಾರೆ.