ನವದೆಹಲಿ : ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ ಅವರನ್ನು ಬಿಜೆಪಿ ನಾಯಕರು ಹೇಡಿಗಳೆಂದು ಕರೆಯುತ್ತಾರೆ ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ಮೇಕ್ ಇಂಡಿಯಾದಲ್ಲೇ ತೊಡಗಿಸಿಕೊಂಡಿರುವ ರೈತರ ಬಗ್ಗೆ ನಿರ್ಲಕ್ಷ್ಯವೇಕೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ನೇರವಾಗಿ ಪ್ರಶ್ನೆ ಕೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರೈತರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಲಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರ ಪ್ರಸ್ತಾಪಕ್ಕೆ ಉತ್ತರಿಸಿರುವ ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್, ಈವರೆಗೂ ಪಂಜಾಬ್ ನಿಂದ 57 ಲಕ್ಷ ಟನ್ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ರೈತರ ಬೆಳೆಗೆ ನೀಡುವ ಬೆಂಬಲ ಬೆಲೆಯಲ್ಲಿ ಕಡಿತಗೊಳಿಸಲಾಗಿಲ್ಲ. ಬೆಳೆ ನಷ್ಟ ಎದುರಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗಿದ್ದು, ಪರಿಹಾರ ಪಡೆಯಲು ಅಗತ್ಯವಿದ್ದ ನಿಯಮಗಳನ್ನು ಸಡಿಲಗೊಳಿಸಿದ್ದೇವೆ. ಕಳೆದ 10 ವರ್ಷಗಳಲ್ಲಿ ರೈತರಿಗೆ ಉಂಟಾಗಿದ್ದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಸರಿಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಯುಪಿಎ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಸಚಿವೆ ಹರ್ ಸಿಮ್ರತ್ ಕೌರ್, ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾಗ ರಾಹುಲ್ ಗಾಂಧಿ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.