ನವದೆಹಲಿ : 'ಆಮ್ ಆದ್ಮಿ ಪಕ್ಷ'ಕ್ಕೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಆಪ್ ಶಾಸಕ ಜರ್ನೈಲ್ ಸಿಂಗ್ ನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಆಪ್ ಶಾಸಕನ ವಿರುದ್ಧ ದಕ್ಷಿಣ ದೆಹಲಿಯ ನಗರ ಪಾಲಿಕೆ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಗಂಭೀರ ಆರೋಪ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜರ್ನೈಲ್ ಸಿಂಗ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಂಡಿದ್ದು, ತಲೆ ಮರೆಸಿಕೊಂಡಿರುವ ತಿಲಕ್ ನಗರದ ಶಾಸಕನನ್ನು ಪಲಾಯನವಾದಿ(absconder) ಎಂದು ಘೋಷಿಸಲಾಗಿದೆ
ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಜರ್ನೈಲ್ ಸಿಂಗ್ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸಬಹುದೆಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕೃಷ್ಣಾ ಪಾರ್ಕ್ ಪ್ರದೇಶಕ್ಕೆ ತೆರಳಿ ಅಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಸ್ಥಳೀಯರು ತಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದರು. ಅಲ್ಲದೇ ತಮ್ಮ ಬೆಂಬಲಕ್ಕಾಗಿ ಶಾಸಕ ಸಿಂಗ್ ಮೊರೆ ಹೋದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಮ್ಮ ಬೆಂಬಲಿಗರ ಸಮೇತ ಆಗಮಿಸಿದ ಶಾಸಕ ಜರ್ನೈಲ್ ಸಿಂಗ್, ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಗರ ಪಾಲಿಕೆ ಜುನಿಯರ್ ಇಂಜಿನಿಯರ್ ಅಜರ್ ಮುಸ್ತಫಾ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಜರ್ನೈಲ್ ಸಿಂಗ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿದ್ದು, ಆಪ್ ಶಾಸಕ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಆಪ್ ಸಚಿವ ಜಿತೇಂದ್ರ ಸಿಂಗ್ ತೋಮರ್ ವಿರುದ್ಧ ನಕಲಿ ಪದವಿ ಪ್ರಮಾಣ ಪತ್ರ ನೀಡಿರುವ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಆಪ್ ಶಾಸಕನ ವಿರುದ್ಧ ಇಂಜಿನಿಯರ್ ಮೇಲೆ ಹಲ್ಲೆ ನಡೆದ ಆರೋಪ ಕೇಳಿಬಂದಿದ್ದು ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ.