ಬೆಂಗಳೂರು : 'ಗ್ರಾಮ ಪಂಚಾಯ್ತಿ' ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತಿರುವ ಜನತೆ, ಈಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾವಣೆ ಮಾಡಲಿದ್ದಾರೆ, ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಜನಾದೇಶ ನೀಡಲಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಿದ್ಧತೆ ನಡೆಸಿಕೊಂಡಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಗಳಿಸುವುದು ತಮ್ಮ ಪಕ್ಷದ ಉದ್ದೇಶ ಎಂದು ಶೆಟ್ಟರ್ ಹೇಳಿದ್ದಾರೆ. ಇದೇ ವೇಳೆ ಬಿಬಿಎಂಪಿ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಅವರು, ಸರ್ಕಾರ ಚುನಾವಣೆ ಮುಂದೂಡಲು ಅನೇಕ ಕಾರಣಗಳನ್ನು ನೀಡಿತ್ತು. ಆದರೂ ಚುನಾವಣೆ ಮುಂದೂಡುವ ಸರ್ಕಾರದ ಯತ್ನ ಸಫಲವಾಗಲಿಲ್ಲ. ನ್ಯಾಯಾಲಯದಲ್ಲೂ ಕೂಡ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ ಉಂಟಾಗಿದೆ ಎಂದಿದ್ದಾರೆ. ಬಿಬಿಎಂಪಿ ಚುನಾವಣೆಯನ್ನು ಎದುರಿಸಲೂ ಬಿಜೆಪಿ ತಯಾರಿ ನಡೆಸುತ್ತಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ.