ಅಯೋಧ್ಯೆ : ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಹಿರಿಯ ನಾಯಕ ನೃತ್ಯ ಗೋಪಾಲ ದಾಸ್ ಅವರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಅಯೋಧ್ಯೆಗೆ ಆಗಮಿಸಿದ್ದ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಮುಂಬರುವ ದಿನಗಳಲ್ಲಿ ರಾಜ್ಯಸಭೆಯಲ್ಲಿ ಬಹುಮತ ಲಭಿಸಿದರೆ ರಾಮಮಂದಿರ ನಿರ್ಮಾಣ ಮಾಡುವಿರಾ ಎಂಬ ಪ್ರಶ್ನೆಗೆ, ’ಇದೊಂದು ಕಾಲ್ಪನಿಕ ಪ್ರಶ್ನೆ' ಎಂಬ ಉತ್ತರ ನೀಡಿದರು.
ಸಂಸತ್ತಿನ ಮೇಲ್ಮನೆಯಾಗಿರುವ ರಾಜ್ಯಸಭೆಯ ಒಟ್ಟು ಬಲ 243. ಆ ಪೈಕಿ ಬಿಜೆಪಿ ಕೇವಲ 45 ಸದಸ್ಯರನ್ನು ಹೊಂದಿದ್ದರೆ, ಪ್ರತಿಪಕ್ಷಗಳ ಸಾಲಿನಲ್ಲಿ 132 ಸಂಸದರು ಇದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಈ ಅವಧಿಯಲ್ಲಿ ಬಿಜೆಪಿಯು ರಾಜ್ಯಸಭೆಯಲ್ಲಿ ಬಹುಮತ ಗಳಿಸುವ ಯಾವುದೇ ಸಾಧ್ಯತೆ ಕಂಡುಬರುತ್ತಿಲ್ಲ. ಹೀಗಾಗಿ ರಾಜನಾಥ ಸಿಂಗ್ ಈ ಹೇಳಿಕೆ ನೀಡಿದ್ದಾರೆಂದು ವಿಶ್ಲೇಷಿಸಲಾಗುತ್ತಿದೆ.
ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಅಲ್ಲದೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಆಶ್ವಾಸನೆಯನ್ನೂ ನೀಡಿತ್ತು. ಆದರೆ ಈಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಿಂದ ಬಿಜೆಪಿ ಹಿಂದೆ ಸರಿದಂತಾಗಿದೆ. ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಕಾರಣಕ್ಕೆ 370ನೇ ವಿಧಿ ರದ್ದು, ನಾಗರಿಕ ಸಂಹಿತೆ ಜಾರಿಯಿಂದಲೂ ವಿಮುಖವಾಗುವ ಲಕ್ಷಣಗಳಿವೆ.