ಬೆಂಗಳೂರು : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್ ನಲ್ಲಿ ಪ್ರಕಟವಾಯಿತು. ನ್ಯಾ.ಸಿ.ಆರ್.ಕುಮಾರಸ್ವಾಮಿ ಮಹತ್ವದ ತೀರ್ಪು ಪ್ರಕಟಿಸಿದ್ದು, ಜಯಲಲಿತಾ ಸೇರಿ ನಾಲ್ವರು ಆರೋಪಿಗಳು ನಿರ್ದೋಷಿಗಳು ಎಂದು ಪ್ರಕಟಿಸಿದ್ದಾರೆ. ಈ ಮೂಲಕ ಹೈಕೋರ್ಟ್, ಅಧೀನ ನ್ಯಾಯಾಲಯದ ತೀರ್ಪನ್ನು ಖುಲಾಸೆಗೊಳಿಸಿದೆ.
ಅಲ್ಲದೇ ಜಪ್ತಿ ಮಾಡಿದ್ದ ಜಯಲಲಿತಾ ಆಸ್ತಿ ಬಿಡುಗಡೆಗೂ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಈ ಮೂಲಕ 18ವರ್ಷಗಳ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ಅವರು ರಿಲೀಫ್ ಆಗಿದ್ದು, ಜಯಲಲಿತಾ ಮತ್ತೊಮ್ಮೆ ತಮಿಳುನಾಡಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ.
ಜಯಲಲಿತಾ ನಿರ್ದೋಷಿ ಎಂದು ತೀರ್ಪು ಹೊರ ಬೀಳುತ್ತಿದಂತೆಯೇ ಹೈಕೋರ್ಟ್ ಆವರಣದಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಇನ್ನು ತಮಿಳುನಾಡಿನಾಧ್ಯಂತ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
1992ರಿಂದ 1996ರವರೆಗೆ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಯಲಲಿತಾ 66.5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದರು ಎಂದು ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿ 18 ವರ್ಷಗಳ ನಂತರ ಬೆಂಗಳೂರಿನ ವಿಶೇಷ ನ್ಯಾಯಾಲಯ 2014ರ ಸೆ. 27ರಂದು ಜಯಲಲಿತಾ ಅವರನ್ನು ದೋಷಿ ಎಂದು ಪರಿಗಣಿಸಿ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ. ದಂಡ ವಿಧಿಸಿತ್ತು. ತೀರ್ಪಿನ ವೇಳೆ ಹಾಜರಿದ್ದ ಜಯಲಲಿತಾ ಅವರನ್ನು ನೇರವಾಗಿ ಜೈಲಿಗೆ ಕಳುಹಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಜಯಲಲಿತಾ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಜಾಮೀನು ತಿರಸ್ಕರಿಸಿದ್ದರಿಂದ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. 2014ರ ಅ.17ರಂದು ಜಾಮೀನು ನೀಡಿದ್ದ ಸುಪ್ರೀಂಕೋರ್ಟ್, ಮೇಲ್ಮನವಿ ವಿಚಾರಣೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಅಂತಿಮ ತೀರ್ಪು ಪ್ರಕಟಿಸುವಂತೆ ಹೈಕೋರ್ಟ್ಗೆ ಆದೇಶಿಸಿತ್ತು.
ಅದರಂತೆ ಜಯಲಲಿತಾ ಮೇಲ್ಮನವಿ ವಿಚಾರಣೆಗೆ 2015ರ ಜ.2ರಂದು ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ ವಿಶೇಷ ಏಕ ಸದಸ್ಯ ಪೀಠ ರಚನೆ ಮಾಡಲಾಗಿತ್ತು. ಜ.5ರಿಂದ ವಿಶೇಷ ಪೀಠ ದಿನನಿತ್ಯದ ಆಧಾರದ ಮೇಲೆ ವಿಚಾರಣೆ ನಡೆಸಿತ್ತು. ಮಾರ್ಚ್ 11ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಈ ಮಧ್ಯೆ ಅ.17ರಿಂದ ಮೂರು ತಿಂಗಳ ಒಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಪ್ರಕಟಿಸಲಾಗದ ಕಾರಣ ಮೇ 12ರೊಳಗೆ ತೀರ್ಪು ಪ್ರಕಟಿಸಬೇಕು ಎಂದು ಕಾಲಾವಕಾಶ ವಿಸ್ತರಿಸಿ ಸುಪ್ರೀಂಕೋರ್ಟ್ ಹೈಕೋರ್ಟ್ ಗೆ ನಿರ್ದೇಶಿಸಿತ್ತು. ಈ ನಿಟ್ಟಿನಲ್ಲಿ ಇಂದು ತೀರ್ಪು ಹೊರಬಿದ್ದಿದೆ.