ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ 26ಕ್ಕೆ ಮೋದಿ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಯಾವುದೇ ಅಭಿವೃದ್ಧಿಯಾಗಿಲ್ಲ. ಭಾರತವನ್ನು ವೇಗವಾಗಿ ಉದ್ಧಾರ ಮಾಡುತ್ತೇವೆ ಎಂದು ಹೇಳಿದವರು ವರ್ಷ ಮುಗಿಯುತ್ತಿದ್ದರೂ ಮಾತಿನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ವಿದೇಶ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರತಿಪಕ್ಷಗಳನ್ನು ಟೀಕಿಸುವುದು ಅತ್ಯಂತ ಕೆಟ್ಟ ಸಂಪ್ರದಾಯ. ಈ ಹಿಂದೆ ಯಾರೂ ಈ ರೀತಿ ನಡೆದುಕೊಂಡಿರಲಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಲು ಆರಂಭಿಸಿದ್ದರು. 129 ವರ್ಷ ಇತಿಹಾಸವಿರುವ ಕಾಂಗ್ರೆಸನ್ನು ದೇಶದಲ್ಲಿ ಇಲ್ಲವಾಗಿಸುವುದು ಅಸಾಧ್ಯದ ಮಾತು. ಮುಂದಿನ 129ವರ್ಷ ಹಾಗೂ ಅದನ್ನೂ ಮೀರಿ ಪಕ್ಷ ಅಸ್ತಿತ್ವ ಉಳಿಸಿಕೊಳ್ಳುತ್ತದೆ. ಬಿಜೆಪಿಯವರ ಹೇಳಿಕೆಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ ಸಮಾವೇಶದಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಮಾಡುವುದಾಗಿ ಹೇಳಿದ್ದಾರೆ. ಮೊದಲು ಕಾಂಗ್ರೆಸ್ ಮುಕ್ತ ಭಾರತ ಹೇಳಿಕೆ ವಿರುದ್ಧ ಬಿಜೆಪಿಯವರು ತಾವು ಹೇಳಿದಂತೆ ಮಾಡುವುದು ಸಾಧ್ಯವೇ ಎಂಬುದಕ್ಕೆ ಸ್ಪಷ್ಟೀಕರಣ ನೀಡಲಿ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.