ನವದೆಹಲಿ : ರಾಜಕೀಯ ವೈರಿಗಳಾದ ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು, ಸೋಮವಾರ ಸಂಭ್ರಮಾಚರಣೆ ಸಿದ್ಧವಾಗಿವೆ. ಬಿಜೆಪಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬುತ್ತಿರುವ ಮುನ್ನಾದಿನವಾದ ಸೋಮವಾರ ಮಥುರಾದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದರೆ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದು 100 ದಿನ ಪೂರ್ತಿಯಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಸರ್ಕಾರ ಜನರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ 1 ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ವಾರ ದೇಶಾದ್ಯಂತ 200 ರ್ಯಾಲಿ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ.
ಈ ರ್ಯಾಲಿ ಕಾರ್ಯಕ್ರಮಗಳಿಗೆ ಸೋಮವಾರ ಉತ್ತರಪ್ರದೇಶದ ಮಥುರಾ ಜಿಲ್ಲೆಯ ನಾಗ್ಲಾ ಚಂದ್ರಭಾನ್ ನಲ್ಲಿ ಚಾಲನೆ ಸಿಗಲಿದೆ. ಜನಸಂಘದ ನಾಯಕ ದೀನ್ ದಯಾಳ್ ಉಪಾಧ್ಯಾಯ ಅವರ ಹುಟ್ಟೂರಿನಲ್ಲಿ ನಡೆಯಲಿರುವ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ಅತ್ತ ಮಥುರಾದಲ್ಲಿ ಬಿಜೆಪಿ ಸಂಭ್ರಮಾಚರಣೆಗೆ ಸಜ್ಜಾಗಿರುವ ಹೊತ್ತಿನಲ್ಲಿಯೇ, ಇತ್ತ ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರ 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ದೆಹಲಿ ಕನ್ಹಾಟ್ ಪ್ಲೇಸ್ ನಲ್ಲಿರುವ ಸೆಂಟ್ರಲ್ ಪಾರ್ಕ್ನಲ್ಲಿ ಜನ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಆಪ್ ನಾಯಕರು, ಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಜೊತೆಗೆ ಪಕ್ಷದ 100 ದಿನಗಳಲ್ಲಿ ಮಾಡಿರುವ ಸಾಧನೆಯನ್ನು ಜನರಿಗೆ ತಲುಪಿಸುವ ಯತ್ನ ಮಾಡಲಿದ್ದಾರೆ.