ಬೆಂಗಳೂರು : ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಕೈಗೊಂಡ ಕ್ರಮ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರೂ ರಾಜಭವನಕ್ಕೆ ಮಾಹಿತಿ ಕೊಟ್ಟಿಲ್ಲ. ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಮೂಲಕ ತಿಳಿದಿದೆ. ಆ ನಿಟ್ಟಿನಲ್ಲಿ ಪ್ರಕರಣದ ಬಗ್ಗೆ ಸಂಪೂರ್ಣ ವಿವರ ಕೊಡಿ ಎಂದು ರಾಜ್ಯಪಾಲರು ಮುಖರ್ಜಿಗೆ ಸೂಚಿಸಿದ್ದಾರೆ.
ಒಂದಂಕಿ ಲಾಟರಿ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿರುವುದು ನನಗೆ ಆತಂಕ ತಂದಿದೆ. ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿರುವ ಬಗ್ಗೆ ನನಗೆ ಮಾಧ್ಯಮಗಳ ವರದಿಯಿಂದ ತಿಳಿಯುತು ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.
ಲಾಟರಿ ಹಗರಣದಲ್ಲಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಹುದ್ದೆಯಲ್ಲಿದ್ದ ಅಲೋಕ್ ಕುಮಾರ್ ಅವರನ್ನು ಶನಿವಾರವಷ್ಟೇ ಅಮಾನತುಗೊಳಿಸಿತ್ತು. ಭಾನುವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಪಿಕೆ ಗರ್ಗ್ ಅವರ ಆಪ್ತ ಸಹಾಯಕ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ.