ನವದೆಹಲಿ : ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬಿಜೆಪಿಯ ಚುನಾವಣಾ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಎಎಪಿ ಸರ್ಕಾರದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಮೋದಿ ವಿರುದ್ಧದ ಆಕ್ರೋಶ ಹೊರಹಾಕಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಗೆ ನಮ್ಮ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯವಿಲ್ಲ. ಹಾಗಾಗಿ ಅವರು ಕೇಂದ್ರದ ಆದೇಶದಂತೆ ನಡೆದುಕೊಳ್ಳುತ್ತಿದ್ದಾರೆ. ಜಂಗ್ ಬರೇ ತಮ್ಮ ಕುರ್ಚಿ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಾಧನೆ ಕಂಡು ಮೋದಿ ಹೆದರಿಹೋಗಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದು, ಭಾರತೀಯ ಜನತಾ ಪಕ್ಷದ ಅಶ್ವಮೇಧ ಕುದುರೆಯ ಗೆಲುವಿನ ಓಟಕ್ಕೆ ದೆಹಲಿಯಲ್ಲಿ ತಡೆಯೊಡ್ಡಿದ್ದೇವೆ. ಆ ಕಾರಣಕ್ಕಾಗಿ ಅವರು ನಮ್ಮ ಮೇಲೆ ಯಾಕೆ ಸೇಡು ಸೇರಿಸಿಕೊಳ್ಳಬೇಕು. ಆದರೆ ಅವರಿಗೆ ದೆಹಲಿ ಜನರನ್ನು ತೊಂದರೆಗೆ ಸಿಲುಕಿಸುವ ದುರುದ್ದೇಶ ಇಟ್ಟುಕೊಂಡಿದ್ದಾರೆ ಎಂದು ದೂರಿದರು.